ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನಾ ಸಭೆ: ಕಾಡು ಪ್ರಾಣಿಗಳ ಹಾವಳಿ ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ

ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನಾ ಸಭೆ:  ಕಾಡು ಪ್ರಾಣಿಗಳ ಹಾವಳಿ ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ

ತಿತಿಮತಿ :-ಕೊಡಗು ಜಿಲ್ಲೆಯಲ್ಲಿ ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಅರಣ್ಯ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ ರೈತರು ಕಾಡುಪ್ರಾಣಿಗಳ ಹಾವಳಿಯಿಂದ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನ ಸೆಳೆದರು.

 ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೊಡಗು ಜಿಲ್ಲಾ ರೈತ ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರು, ಕಾಡು ಪ್ರಾಣಿಗಳು ನಿರಂತರ ಕೃಷಿ ಫಸಲುಗಳನ್ನು ನಾಶ ಮಾಡುವುದರ ಮೂಲಕ ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿ ಮಾಡುತ್ತಿವೆ. ಜನರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಯಾವುದೇ ಶಾಶ್ವತ ಯೋಜನೆಗಳನ್ನು ರೂಪಿಸದೆ ಅವೈಜ್ಞಾನಿಕ ಕಾಮಗಾರಿಗಳನ್ನು ನಡೆಸುವ ಮೂಲಕ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದು ಯೋಜನೆಯ ಹಣವನ್ನು ಅಧಿಕಾರಿಗಳು ಭ್ರಷ್ಟಾಚಾರದ ಮೂಲಕ ಕಬ್ಬಳಿಸುತ್ತಿದ್ದಾರೆ ಆರೋಪಿಸಿದರು. ಜಿಲ್ಲೆಯ ಜನರ ತಾಳ್ಮೆಯನ್ನು ಪರೀಕ್ಷೆ ಮಾಡದೆ ಕಾಡುಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಬೃಹತ್ ಹೋರಾಟದೊಂದಿಗೆ ಕೊಡಗು ಬಂದ್‌ಗೆ ಕರೆ ನೀಡಿವು ಮೂಲಕ ಜಿಲ್ಲೆಯ ಜನರನ್ನು ಒಗ್ಗೂಡಿಸಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಕಾರ್ಮಿಕ ಸಂಘಟನೆಯ ಮುಖಂಡ ಪಿ.ಆರ್ ಭರತ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷ ಮಿತಿ ಮೀರಲು ಅರಣ್ಯ ಇಲಾಖೆ ಅಧಿಕಾರಿಗಳೇ ಕಾರಣ. ವರ್ಷವಿಡೀ ಕಷ್ಟಪಟ್ಟು ಬೆಳೆದ ಕೃಷಿ ಫಸಲುಗಳು ಕಾಡು ಪ್ರಾಣಿಗಳ ಪಾಲಾಗುತ್ತಿದ್ದು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಹೊಟ್ಟೆಪಾಡಿನ ಜೀವನಕ್ಕಾಗಿ ಕೆಲಸಕ್ಕೆ ತೆರಳುವ ಕಾರ್ಮಿಕರು ಕಾಡು ಪ್ರಾಣಿಗಳ ಹಾವಳಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಮನುಷ್ಯ ಜೀವಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ಕೊಡಗು ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಠಿ ಮಾತನಾಡಿ, ತಾವು ಒಂದು ತಿಂಗಳ ಹಿಂದೆ ಕೊಡಗು ಜಿಲ್ಲೆಗೆ ಆಗಮಿಸಿದ್ದು ಕಾಡು ಪ್ರಾಣಿಗಳ ಹಾವಳಿ ಹಾಗೂ ಅರಣ್ಯ ಇಲಾಖೆಗೆ ಸಂಬoಧಪಟ್ಟ ಮಾಹಿತಿಗಳನ್ನು ಪಡೆದುಕೊಳ್ಳಲಾಗಿದೆ. ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ. 1.90 ಸಾವಿರ ಹೆಕ್ಟೆರ್ ಅರಣ್ಯ ವ್ಯಾಪ್ತಿ ಹೊಂದಿದ್ದು ನಾಗರಹೊಳೆ ವ್ಯಾಪ್ತಿ ಸೇರಿದಂತೆ ಸುಮಾರು 421 ಕಿ.ಮೀ. ಈಪಿಟಿ ಮಾಡಲಾಗಿದೆ. ಇದರಲ್ಲಿ 433 ಕಿ.ಮೀ ಸೋಲಾರ್ ಬೇಲಿ ಮಾಡಲಾಗಿದ್ದು, 141 ಕಿ.ಮೀ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ರೇಡಿಯೋ ಕಾಲರ್ ಸೇರಿದಂತೆ ವಿನೂತನ ತಂತ್ರಜ್ಞಾನದ ಎ.ಐ ಕ್ಯಾಮೆರಾಗಳನ್ನು ಅಳವಡಿಸಿ ಕಾಡು ಪ್ರಾಣಿಗಳ ಹಾವಳಿ ಬಗ್ಗೆ ನಿಗಾ ವಹಿಸಲಾಗಿದ್ದು ಕಾಲಕಾಲಕ್ಕೆ ರೈತರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮಾತನಾಡಿ ಕಾಡು ಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕ ಪೊನ್ನಣ್ಣ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರೊಂದಿಗೆ ಸಭೆ ನಡೆಸಿ ಕೊಡಗು ಜಿಲ್ಲೆಯ ಗಂಭೀರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು. ಸರ್ಕಾರ ಆನೆಗಳ ಪುನರ್ವಸತಿಗಾಗಿ 2 ಸಾವಿರ ಎಕರೆ ಭೂಮಿಯಲ್ಲಿ ಕಾರ್ಯ ಯೋಜನೆ ರೂಪಿಸುತ್ತಿದ್ದು ಹಂತಹoತವಾಗಿ ಸಮಸ್ಯೆ ಬಗ್ಗೆ ಹರಿಯಲಿದೆ ಎಂದು ಹೇಳಿದರು. ಈ ಸಂದರ್ಭ ಆಕ್ರೋಶಗೊಂಡ ರೈತರು ಸಂಕೇತ್ ಪೂವಯ್ಯ ಅವರನ್ನೇ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಮಳೆಯ ನಡುವೆಯೂ ಮೂರು ಗಂಟೆ ಕಾಲ ನಡೆದ ಸಭೆಯಲ್ಲಿ ಕಾಡು ಪ್ರಾಣಿಗಳ ಹಾವಳಿಯ ಬಗ್ಗೆ ಸುದೀರ್ಘ ಗಂಭೀರ ಚರ್ಚೆ ನಡೆಯಿತು. ಬಳಿಕ ಪ್ರತಿಭಟನೆಯ ಮನವಿ ಪತ್ರವನ್ನು ಅರಣ್ಯ ಇಲಾಖೆ ಹಾಗೂ ಸರ್ಕಾರಕ್ಕೆ ಸಲ್ಲಿಸಲಾಯಿತು.

 ಈ ಸಂದರ್ಭ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿ ಸೀಮಾ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ವಿರಾಜಪೇಟೆ ಉಪವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಕೊಡಗು ರೈತ ಸಂಘ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಟ್ರುಮಾಡ ಸುಜಯ್ ಬೋಪಯ್ಯ, ಜಿಲ್ಲಾ ಪ್ರಧಾನ ಸಂಚಾಲಕ ಪುಚ್ಚಿಮಾಡ ಸುಭಾಸ್ ಸುಬ್ಬಯ್ಯ, ಸಹ ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಜಿಲ್ಲಾ ಖಜಾಂಚಿ ಇಟ್ಟೀರ ಸಭಿತ ಭೀಮಯ್ಯ, ವಿರಾಜಪೇಟೆ ತಾಲೂಕು ಅಧ್ಯಕ್ಷ ಬಾಚಮಾಡ ಭವಿ ಕುಮಾರ್, ಸೋಮವಾರಪೇಟೆ ಹೂವಯ್ಯ, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಅಲೆಮಾಡ ಮಂಜುನಾಥ್ ಸೇರಿದಂತೆ ಕಾರ್ಮಿಕ ಸಂಘಟನೆ ಪ್ರಮುಖರು, ಬೆಳೆಗಾರರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ: ಚೆಪ್ಪುಡಿರ ರೋಷನ್, ಪೊನ್ನಂಪೇಟೆ