ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

Jun 5, 2026 - 09:45
Jun 5, 2026 - 10:02
 0  854
ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು, ಜೂನ್ 5: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ, ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದರು.

ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ರಾಜೀನಾಮೆಯ ಹಿಂದಿನ ಅಸಲಿ ಕಾರಣಗಳನ್ನು ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಜಲಸಂಪನ್ಮೂಲ ಇಲಾಖೆ ನೀಡಿದ್ದಕ್ಕೆ ಬೇಸರ ಎಂಬ ಒಂದೇ ಕಾರಣಕ್ಕೆ ರಾಜೀನಾಮೆ ನೀಡುತ್ತಿಲ್ಲ. ಈಗಿನ ಮುಖ್ಯಮಂತ್ರಿಗಳು ಹಿಂದೆ ಅವರಾಗಿಯೇ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ, ಅದರಂತೆ ನಡೆದುಕೊಂಡಿಲ್ಲ. ಈ ವಿಚಾರ ಜನರಿಗೆ ತಿಳಿಯಬೇಕು ಎಂದು ಹೇಳಿದರು.

ಯಾರ ಮೇಲೂ ಕೋಪವಿಲ್ಲ, ಕಾಂಗ್ರೆಸ್‌ನಲ್ಲೇ ಇರ್ತೇನೆ

ನನಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಾಗಲಿ ಅಥವಾ ಸಿದ್ದರಾಮಯ್ಯ ಅವರ ಮೇಲಾಗಲಿ ಯಾವುದೇ ವೈಯಕ್ತಿಕ ಕೋಪವಿಲ್ಲ. ನಾನು ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದೇನೆ ಎಂಬ ಸತ್ಯ ಜನರಿಗೆ ಗೊತ್ತಾಗಬೇಕಷ್ಟೇ. ನಾನು ಕಳೆದ 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷ ನನಗೆ ಸಾಕಷ್ಟು ಅವಕಾಶಗಳನ್ನು ಮಾಡಿಕೊಟ್ಟಿದೆ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಯೇ ಹೊರತು, ಕಾಂಗ್ರೆಸ್ ಪಕ್ಷಕ್ಕಲ್ಲ. ನನ್ನ ಜೀವನದಲ್ಲಿ ಎಂದಿಗೂ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ನುಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0