ಮಂಗಳೂರು:ಜೇನುಕೃಷಿ ತರಬೇತಿ ನೆಪದಲ್ಲಿ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ, ಆರೋಪಿ ಬಂಧನ

ಮಂಗಳೂರು:ಜೇನುಕೃಷಿ ತರಬೇತಿ ನೆಪದಲ್ಲಿ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ, ಆರೋಪಿ ಬಂಧನ

ಮಂಗಳೂರು, ಡಿ.21: ಜೇನುಕೃಷಿ ತರಬೇತಿ ನೀಡುವುದಾಗಿ ಹೇಳಿ ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಯಲ್ಲಿ ಇರಿಸಿಕೊಂಡು ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಮಂಗಳೂರಿನ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಲದ ಅಪ್ರಾಪ್ತ ಬಾಲಕಿಯನ್ನು ಜೇನುಕೃಷಿ ಕಲಿಸುವ ನೆಪದಲ್ಲಿ ಆರೋಪಿಯು ತನ್ನ ನಿವಾಸಕ್ಕೆ ಕರೆತಂದಿದ್ದಾನೆ. ಪೋಷಕರು ಸುಮಾರು ಎರಡು ತಿಂಗಳ ಹಿಂದೆ ಮಗಳನ್ನು ಆರೋಪಿಯ ಬಳಿ ಬಿಟ್ಟಿದ್ದರು ಎನ್ನಲಾಗಿದೆ. ಈ ಅವಧಿಯಲ್ಲಿ ಡಿಸೆಂಬರ್ 2ರಿಂದ 19ರವರೆಗೆ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಘಟನೆಯ ಮಾಹಿತಿ ದೊರಕಿದ ನಂತರ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ರಕ್ಷಣೆ ಕಾಯ್ದೆ (ಪೋಕ್ಸೋ)ಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.