ಹುಣಸೂರಿನಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ದರೋಡೆ; 5 ಕೋಟಿ ರೂ. ಮೌಲ್ಯದ ಆಭರಣ ಲೂಟಿ
ಹುಣಸೂರು: ಪಟ್ಟಣದ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ‘ಸ್ಕೈ ಗೋಲ್ಡ್ ಅಂಡ್ ಡೈಮಂಡ್’ ಚಿನ್ನಾಭರಣ ಮಳಿಗೆಯಲ್ಲಿ ಭಾನುವಾರ ಮಧ್ಯಾಹ್ನ ಐವರು ಮುಸುಕುದಾರರು ದರೋಡೆ ನಡೆಸಿ, ಸುಮಾರು 4ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ.
ಬೈಕ್ ನಲ್ಲಿ ಬಂದ ದರೋಡೆಕೋರರು ಮಳಿಗೆಗೆ ಏಕಾಏಕಿ ನುಗ್ಗಿ, ಮ್ಯಾನೇಜರ್ ಅಸ್ಗರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಗೆ ಮಳಿಗೆಯಲ್ಲಿದ್ದ ಸಿಬ್ಬಂದಿ ಆತಂಕಗೊಂಡಿದ್ದಾರೆ. ನಂತರ ದರೋಡೆಕೋರರು ಚಿನ್ನಾಭರಣ, ವಜ್ರಾಭರಣ ಹಾಗೂ ಇತರ ಮೌಲ್ಯಯುತ ವಸ್ತುಗಳನ್ನು ಸಂಗ್ರಹಿಸಿಕೊಂಡು ಪರಾರಿಯಾಗಿದ್ದಾರೆ.
ಪರಾರಿಯಾಗುವ ವೇಳೆ ಐವರಲ್ಲಿ ಒಬ್ಬ ದರೋಡೆಕೋರ ತನ್ನ ಹೆಲ್ಮೆಟ್ ಅನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದಾನೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ ಮ್ಯಾನೇಜರ್ ಅಸ್ಗರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದರೋಡೆಕೋರರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದೆ.