ಶಾಲಾ ಸಹಪಾಠಿಗಳಿಂದಲೇ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಕೊಲೆ
ಹುಬ್ಬಳ್ಳಿ, ಜ. 15: ಶಾಲಾ ವಯಸ್ಸಿನ ವಿದ್ಯಾರ್ಥಿಗಳೇ ಸಹಪಾಠಿಯೊಬ್ಬನನ್ನು ಹತ್ಯೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳವು ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಪ್ರಾಣಪೋಕರಿಗೆ ಕಾರಣವಾಗಿದೆ.
ಕುಂದಗೋಳ ಪಟ್ಟಣದ ಅನುದಾನಿತ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ ನಿಂಗರಾಜ್ ಅವಾರಿ (16) ಎಂಬ ವಿದ್ಯಾರ್ಥಿಯನ್ನು, ಅದೇ ಶಾಲೆಯ ಸಹಪಾಠಿಯೊಬ್ಬ ಸೇರಿದಂತೆ ಮೂವರು ಅಪ್ರಾಪ್ತರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಬುಧವಾರ ಸಂಜೆ ಈ ಘಟನೆ ನಡೆದಿದೆ.
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಎರಡು ದಿನಗಳ ಹಿಂದೆ ನಿಂಗರಾಜ್ ಹಾಗೂ ಕೆಲ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದಿತ್ತು. ಇದನ್ನು ಮುಂದುವರಿಸಿಕೊಂಡ ಸಹಪಾಠಿಯೊಬ್ಬ, ಎಸ್ಎಸ್ಎಲ್ಸಿ ಓದನ್ನು ಮಧ್ಯದಲ್ಲಿ ತೊರೆದಿದ್ದ ತನ್ನ ಇಬ್ಬರು ಸ್ನೇಹಿತರನ್ನು ಕರೆದುಕೊಂಡು ಬಂದು ನಿಂಗರಾಜ್ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ನಿಂಗರಾಜ್ ಅನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಕುಂದಗೋಳ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂವರು ಅಪ್ರಾಪ್ತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆಗೆ ಇತರೆ ಕಾರಣಗಳಿದ್ದವೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.