ಸೋಮವಾರಪೇಟೆ;ಉಪ್ಪಿನಕಾಯಿ ಸಾಗಾಟ ಮಾಡುತ್ತಿದ್ದ ವಾಹನ ಅಪಘಾತ
ಸೋಮವಾರಪೇಟೆ, ಜೂ. 6: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ದಿಂದ ಮಡಿಕೇರಿಗೆ ಉಪ್ಪಿನಕಾಯಿ ಸಾಗಣೆ ಮಾಡುತ್ತಿದ್ದ ಕಂಟೇನರ್ ವಾಹನವೊಂದು ಬ್ರೇಕ್ ವಿಫಲ ಗೊಂಡು ರಸ್ತೆ ಬದಿಯ ತೋಟಕ್ಕೆ ನುಗ್ಗಿದ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಸಮೀಪದ ತಾಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಡೆದಿದೆ.
ಶಿಕಾರಿಪುರದಿಂದ ಮಡಿಕೇರಿಗೆ ತೆರಳುತ್ತಿದ್ದ ವಾಹನವು ಐಗೂರು ಮಾರ್ಗವಾಗಿ ತೇರಳಬೇಕಿತ್ತು. ಆದರೆ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚಾಲಕ ವಾಹನವನ್ನು ತಾಕೇರಿ ಮಾರ್ಗವಾಗಿ ಮಡಿಕೇರಿಗೆ ಕೊಂಡೊಯ್ಯಲು ಮುಂದಾಗಿದ್ದಾನೆ.
ಈ ವೇಳೆ ಕಡಿದಾದ ಇಳಿಜಾರು ರಸ್ತೆಯಲ್ಲಿ ವಾಹನದ ಬ್ರೇಕ್ ವಿಫಲಗೊಂಡ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿದೆ. ಅಪಘಾತದ ವೇಳೆ ವಾಹನದಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಅವರಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತದಿಂದ ವಾಹನಕ್ಕೆ ಹಾನಿಯಾಗಿದೆ.

