Kodagu

ಸೋಮವಾರಪೇಟೆ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪೂರ್ವಭಾವಿ ಸಭೆ

admincoorgdaily

ಸೋಮವಾರಪೇಟೆ: ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ನಡೆಯಿತು.

 ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ತಹಶೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಹವಮಾನ ವರದಿಯನ್ನು ನೋಡಿಕೊಂಡು ದಿನಾಚರಣೆಯನ್ನು ವ್ಯವಸ್ಥಿತವಾಗಿ ನಡೆಸಲಾಗುವುದು. ವಿವಿಧ ಇಲಾಖೆಯವರು ತಮಗೆ ನೀಡಿರುವ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ಅಲ್ಲದೆ ಪ್ರತಿಯೊಬ್ಬ ಇಲಾಖಾಧಿಕಾರಿಗಳು ಕಾರ್ಯಕ್ರಮದಲ್ಲಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ತಪ್ಪಿದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಮಳೆ ಇಲ್ಲದಿದ್ದರೆ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಸಲಾಗುವುದು. ಮಳೆ ಇದ್ದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಎದುರಿನ ವೇದಿಕೆಯಲ್ಲಿ ನಡೆಸಲಾಗುತ್ತದೆ. ವಾಟರ್ ಪ್ರೂಫ್ ಶಾಮಿಯಾಮ ಹಾಕಿಸಲಾಗುವುದು.

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ನಂತರ, ಜೂನಿಯರ್ ಕಾಲೇಜಿನ ಆವರಣದಲ್ಲಿ 9.30ಕ್ಕೆ ಸಮಿತಿ ವತಿಯಿಂದ ಧ್ವಜಾರೋಹಣ ನೆರವೇರಿಸಲಾಗುವುದು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳು, ಸಾರ್ವಜನಿಕ ಸೇವೆಯ ಸಾಧಕರು, ವಿವಿಧ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಇಒ ಪರಮೇಶ ಕುಮಾರ್, ಬಿಇಒ ಭಾಗ್ಯಮ್ಮ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು, ವಿವಿಧ ಸಂಘಟನೆಗಳ ಅಧ್ಯಕ್ಷರುಗಳು ಇದ್ದರು.