ಜೈಪುರಕ್ಕೆ ಮೈಸೂರಿನಿಂದ ವಿಶೇಷ ರೈಲು ಸಂಚಾರ: ಸಂಸದ ಯದುವೀರ್ ಪ್ರಯತ್ನದಿಂದ ಕ್ರಮ ಕೈಗೊಂಡ ರೈಲ್ವೆ ಇಲಾಖೆ
ಮೈಸೂರು, ಅ.16: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ಇದಕ್ಕೆ ಕ್ರಮ ಕೈಗೊಂಡಿದೆ.
ದೀಪಾವಳಿ ಹಬ್ಬದ ಸಮಯದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಹಾಗೂ ಮೈಸೂರಿನಿಂದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ತಾತ್ಕಾಲಿಕವಾಗಿ ಹೊಸ ರೈಲು ಪರಿಚಯಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು ಈ ಕುರಿತು ಮಾಹಿತಿ ನೀಡಿದ್ದಾರೆ. ಮೈಸೂರಿನಿಂದ ರಾಜಸ್ಥಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ.
ಜನದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಂಸದರು ಹೇಳಿದ್ದಾರೆ. ರಾಜಸ್ಥಾನದ ಜನರು ಹಾಗೂ ಇತರರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.