ಮೊಬೈಲ್ ಬಳಕೆ ಕಡಿಮೆ ಮಾಡು ಎಂದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ

ಮೊಬೈಲ್ ಬಳಕೆ ಕಡಿಮೆ ಮಾಡು ಎಂದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ

ಹುಬ್ಬಳ್ಳಿ, ಡಿ. 19: ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಓದಿನ ಕಡೆ ಗಮನಹರಿಸುವಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅರುಣಗೌಡ (16) ಎಂದು ಗುರುತಿಸಲಾಗಿದೆ. ಆತ ಸ್ಥಳೀಯ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು.

ಪೋಷಕರು ಮೊಬೈಲ್ ಬಳಕೆಯ ಬಗ್ಗೆ ಬುದ್ಧಿವಾದ ಹೇಳಿದ ಹಿನ್ನೆಲೆಯಲ್ಲಿ ಡಿಸೆಂಬರ್ 16ರಂದು ಅರುಣಗೌಡ ಕ್ರಿಮಿನಾಶಕ ಸೇವಿಸಿದ್ದಾನೆ ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಅವನನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಘಟನೆಯಿಂದ ಕುಟುಂಬಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.