ಅಂಗನವಾಡಿ, ಶಾಲೆ, ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ ಬಗ್ಗೆ 10 ದಿನದೊಳಗೆ ಲಿಖಿತ ವರದಿ ನೀಡಿ: ಉಸ್ತುವಾರಿ ಸಚಿವ ಎನ್.ಎಸ್ ಭೋಸರಾಜು

Jun 26, 2025 - 21:20
 0  23
ಅಂಗನವಾಡಿ, ಶಾಲೆ, ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ ಬಗ್ಗೆ 10 ದಿನದೊಳಗೆ ಲಿಖಿತ ವರದಿ ನೀಡಿ: ಉಸ್ತುವಾರಿ ಸಚಿವ ಎನ್.ಎಸ್ ಭೋಸರಾಜು

ಮಡಿಕೇರಿ : ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಅಂಗನವಾಡಿ, ಶಾಲೆ, ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ ಬಗ್ಗೆ 10 ದಿನದೊಳಗೆ ಲಿಖಿತ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಮಳೆ ಹಾನಿ ಬಗ್ಗೆ ಗುರುವಾರ ಮಾಹಿತಿ ಪಡೆದು ಸಚಿವರು ಮಾತನಾಡಿದರು.ಜಿಲ್ಲೆಯಲ್ಲಿ ಇನ್ನೂ 40 ದಿನಗಳ ಕಾಲ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ಅಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ಸ್ಥಳಕ್ಕೆ ಹಾಗಾಗ ಭೇಟಿ ನೀಡಬೇಕು. ಇದರಿಂದ ಸಮಸ್ಯೆ ಇದ್ದಲ್ಲಿ ಪರಿಹರಿಸಲು ಸಾಧ್ಯ ಎಂದರು. 

       ಮುಂದಿನ ದಿನಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನಹರಿಸಬೇಕು. ದೂರು ಬಾರದಂತೆ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಎನ್.ಎಸ್.ಭೋಸರಾಜು ಹೇಳಿದರು. ಪ್ರಾಕೃತಿಕ‌ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 37 ಕೋಟಿ ಹಣವಿದೆ. ಹಾಗೆಯೇ ತಹಶಿಲ್ದಾರರ ಬಳಿ 2 ಕೋಟಿ ಹಣ ಇದೆ. ಮನೆ ಮತ್ತಿತರ ಹಾನಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಳೆದ ಬಾರಿ ಗ್ರಾ.ಪಂ.ಗಳಿಗೂ ಹಣ ನೀಡಲಾಗಿತ್ತು, ಈ ಬಾರಿಯೂ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.  ಕಳೆದ ಮೇ ಕೊನೆ ವಾರದಿಂದ ಸುರಿದ ವ್ಯಾಪಕ ಮಳೆಗೆ ವಿದ್ಯುತ್, ರಸ್ತೆ, ಸೇತುವೆ, ಮನೆ ಸೇರಿದಂತೆ ವಿವಿಧ ರೀತಿಯ ಹಾನಿಯಾಗಿದ್ದು, ವಿದ್ಯುತ್ ವ್ಯತ್ಯಯವನ್ನು ಆಯಾಯ ಸಂದರ್ಭದಲ್ಲಿಯೇ ಸರಿಪಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಂಡಿರಬೇಕು ಎಂದು ಸಚಿವರು ಸಲಹೆ ನೀಡಿದರು. 

  ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಮಳೆಗಾಲದಲ್ಲಿ ಕರ್ತವ್ಯ ನಿರ್ವಹಿಸುವ ಲೈನ್ ಮ್ಯಾನ್ ಹಾಗೂ ಗ್ಯಾಂಗ್ ಮನ್ ಗಳಿಗೆ ರೈನ್ ಕೋಟ್ ಸೇರಿದಂತೆ ಅಗತ್ಯ ಉಪಕರಣ ನೀಡಬೇಕು. ಜೊತೆಗೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಾಕೀತು ಮಾಡಿದರು. 

ರಾತ್ರಿ ವೇಳೆ ಮಡಿಕೇರಿ ನಗರದಲ್ಲಿ 8 ಗಂಟೆಯಾದರೂ ವಿದ್ಯುತ್ ಪೂರೈಕೆ ಇಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸುವಂತೆ ಶಾಸಕರು ಸೂಚಿಸಿದರು.ಲೋಕೋಪಯೋಗಿ, ಗ್ರಾಮೀಣ ರಸ್ತೆ ಸರಿಪಡಿಸುವಂತಾಗಬೇಕು. ಸಾರಿಗೆ ಸಂಚಾರಕ್ಕೆ ಯಾವುದೇ ರೀತಿ ವ್ಯತ್ಯಯ ಆಗದಂತೆ ಗಮನಹರಿಸುವಂತೆ ಶಾಸಕರು ನಿರ್ದೇಶನ ನೀಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಸ್ಥಳೀಯ ಸಂಸ್ಥೆಗಳು ಮುನ್ನೆಚ್ಚರ ವಹಿಸಬೇಕು ಎಂದು ಸಚಿವರು ಸೂಚಿಸಿದರು. 

ತಾಲ್ಲೂಕು ಮಟ್ಟದಲ್ಲಿ ತಹಶಿಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಇಒಗಳು ಹಾಗೂ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು. ಆ ದಿಸೆಯಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಮಳೆಗಾಲದಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಹೆಚ್ವಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಆದ್ದರಿಂದ ಪ್ರವಾಸಿ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು. ಜತೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ವುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ವಿವಿಧ ಇಲಾಖೆ ಅಧಿಕಾರಿಗಳು ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0