ಸುಪ್ರೀಂ ಕೋರ್ಟ್ನಿಂದ ಮಾಲೂರು ಶಾಸಕ ನಂಜೇಗೌಡರಿಗೆ ತಾತ್ಕಾಲಿಕ ರಿಲೀಫ್: ಹೈಕೋರ್ಟ್ನ ಆಯ್ಕೆ ರದ್ದು ಆದೇಶಕ್ಕೆ ತಡೆ
ನವದೆಹಲಿ: ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ 2023ರ ಚುನಾವಣೆಯ ಆಯ್ಕೆಯನ್ನು ಅಮಾನ್ಯಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಮಂಗಳವಾರ ಈ ಸಂಬಂಧ ಆದೇಶ ಹೊರಡಿಸಿದ್ದು, ಹೈಕೋರ್ಟ್ ಸೂಚಿಸಿದಂತೆ ಮರು ಮತ ಎಣಿಕೆ ಪ್ರಕ್ರಿಯೆ ನಡೆಯಬಹುದು, ಆದರೆ ಅದರ ಫಲಿತಾಂಶವನ್ನು ಪ್ರಕಟಿಸದೆ ಮುಚ್ಚಿದ ಲಕೋಟೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕೆಂದು ನಿರ್ದೇಶಿಸಿದೆ.
ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಮರು ಎಣಿಕೆಯ ಫಲಿತಾಂಶವನ್ನು ಪ್ರಕಟಿಸಬಾರದು ಎಂಬುದನ್ನೂ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.