ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರ ವಹಿಸಿ: ಡಾ.ಸತೀಶ್ ಕುಮಾರ್

Jul 21, 2026 - 17:32
 0  34
ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರ ವಹಿಸಿ: ಡಾ.ಸತೀಶ್ ಕುಮಾರ್

ಮಡಿಕೇರಿ:-ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಎಚ್ಚರ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಕೋರಿದ್ದಾರೆ.

ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಒಂದೇ ಕಡೆ ನೀರು ನಿಲ್ಲುವುದರಿಂದ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತದೆ. ಆದ್ದರಿಂದ ನೀರು ನಿಲ್ಲದಂತೆ ಗಮನ ಹರಿಸಬೇಕು. ತೆಂಗಿನ ಚಿಪ್ಪು, ಟೈಯರ್, ಬಕೆಟ್ ಮತ್ತಿತರಗಳಿಂದ ಸೊಳ್ಳೆಗಳು ಉತ್ಪತ್ತಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಪರಿಸರ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮನವಿ ಮಾಡಿದರು.

ಸೊಳ್ಳೆಗಳಿಂದ ಡೆಂಗ್ಯೂ, ಮಲೇರಿಯಾ, ಚಿಕೂನ್ ಗುನ್ಯಾ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಡಾ.ಸತೀಶ್ ಕುಮಾರ್ ಅವರು ಸಲಹೆ ಮಾಡಿದರು.

ಹಗಲು ವೇಳೆಯಲ್ಲಿ ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗ ಬರುವ ಸಾಧ್ಯತೆ ಇದೆ ಎಂದರು. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ, 1634 ಡೆಂಗ್ಯೂ ಮಾದರಿಯನ್ನು ಪರೀಕ್ಷಿಸಲಾಗಿದ್ದು, 29 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು, ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ. ಹಾಗೆಯೇ ಮಲೇರಿಯಾ, ಚಿಕೂನ್ ಗುನ್ಯಾ ಮತ್ತಿತರ ಸಾಂಕ್ರಾಮಿಕ ರೋಗಗಳು ವರದಿಯಾಗಿಲ್ಲ ಎಂದು ಡಾ.ಸತೀಶ್ ಕುಮಾರ್ ಅವರು ತಿಳಿಸಿದರು. 

ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದಡಿ ಹಲವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 3874 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ರೇಬೀಸ್ ನಿರೋಧಕ ಲಸಿಕೆ ಪಡೆದು ಎಲ್ಲರೂ ಗುಣಮುಖರಾಗಿದ್ದಾರೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವಗೆ 144 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು, ಹಾವು ಕಡಿತಕ್ಕೆ ಚಿಕಿತ್ಸೆ ನೀಡಿ, ಗುಣ ಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧ ಜೌಷಧಿ ದಾಸ್ತನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಾಹಿತಿ ನೀಡಿದರು. 

ವಿವಿಧ ಕಡೆಗಳಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿಯೂ ಸಹ ಅಗತ್ಯ ಮುನ್ನೆಚ್ಚರ ವಹಿಸಲಾಗಿದೆ. ಆ ನಿಟ್ಟಿನಲ್ಲಿ ವಿವಿಧ ರೀತಿಯ ಮಾಸ್ಕ್ ದಾಸ್ತಾನು ಮಾಡಲಾಗಿದೆ. ಸಾರ್ವಜನಿಕರು ಈ ಬಗ್ಗೆಯೂ ಸಹ ಎಚ್ಚರ ವಹಿಸಬೇಕು ಎಂದು ಕೋರಿದರು. 

ಹೃದ್ರೋಗಸಂಬಂಧಿಸಿದಂತೆ ಅಲ್ಲಲ್ಲಿ ವರದಿಯಾಗುತ್ತಿದ್ದು, ಹೃದಯಕ್ಕೆ ಸಂಬಂಧಿಸಿದಂತೆ ತೊಂದರೆಯಾದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡುವಂತಾಗಬೇಕು. ಜೊತೆಗೆ ತಜ್ಞ ವೈದ್ಯರನ್ನು ಸಂಪರ್ಕಿಸಿ ರೋಗ ಗುಣಪಡಿಸುವಂತಾಗಬೇಕು, ಸರ್ಕಾರದಿಂದ ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಎಪಿಎಲ್ ಕಾರ್ಡ್‍ದಾರರಿಗೂ ಸಹ ರಿಯಾಯಿತಿ ದರದಲ್ಲಿ ಆರೋಗ್ಯ ಸೇವೆಗಳು ಲಭ್ಯವಾಗಲಿದೆ ಎಂದು ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು.

ಎನ್.ಪಿ-ಎನ್‍ಸಿಡಿ ಕಾರ್ಯಕ್ರಮದಡಿಯಲ್ಲಿ 30 ವರ್ಷ ಮೇಲ್ಪಟ್ಟವರಿಗೆ ಮದುಮೇಹ, ಅಧಿಕ ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠ ಕ್ಯಾನ್ಸರ್‍ಗೆ ಸಂಬಂಧಿಸಿದಂತೆ ಮುನ್ನೆಚ್ಚರ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 56,606 ಮಂದಿಗೆ ರಕ್ತದೊತ್ತಡ, ಮಧುಮೇಹ 36,247, ಬಾಯಿ ಕ್ಯಾನ್ಸರ್ 46, ಸ್ತನ ಕ್ಯಾನ್ಸರ್ 80, ಗರ್ಭಕಂಠದ ಕ್ಯಾನ್ಸರ್ 22, ಇತರೆ ಕ್ಯಾನ್ಸರ್ 70 ವರದಿಯಾಗಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಡಯಾಲಿಸಿಸ್ ಕೇಂದ್ರದಲ್ಲಿ ಜಿಲ್ಲಾಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಟ್ಟು 34 ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಹಲವರಿಗೆ ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. 

ಗೃಹ ಆರೋಗ್ಯ ಯೋಜನೆಯಡಿ 14 ಕಾಯಿಲೆಯನ್ನು ಗುರುತಿಸಲಾಗಿದ್ದು, ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು. 

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಉತ್ಪನ್ನಗಳಿಂದ ಆಗುವ ದುಷ್ಪರಿಣಾಮದ ಕುರಿತು ಜಿಲ್ಲೆಯ ಎಲ್ಲೆಡೆ ಅರಿವು ಮೂಡಿಸಲಾಗುತ್ತಿದೆ. ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಬೀದಿ ನಾಟಕ, ತಂಬಾಕು ಉತ್ಪನ್ನಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಹೀರಾತು ಪ್ರದರ್ಶನ ಮತ್ತಿತರ ಶಿಕ್ಷಣ ಮಾರ್ಗದರ್ಶಿ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ ಎಂದರು.

ಶಾಲಾ-ಕಾಲೇಜುಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ತನಿಖಾ ತಂಡ ರಚಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ತಾಯಿ ಮತ್ತು ಶಿಶು ಮರಣ ತಡೆಯುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಅಪೌಷ್ಠಿಕತೆ ಹೋಗಲಾಡಿಸುವಲ್ಲಿ ವಿವಿಧ ಇಲಾಖೆಗಳ ಸಹಕಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಪೌಷ್ಠಿಕ ಮಕ್ಕಳಿಗೆ ವಿಶೇಷ ಚಿಕಿತ್ಸೆ ಮತ್ತು ಪಾಲನೆಗಾಗಿ ಉಚಿತ ಸಾರಿಗೆ ವೆಚ್ಚ, ವೈದ್ಯಕೀಯ ನೆರವು ಮತ್ತು ಪಾಲನೆ ಮಾಡಲಾಗುತ್ತಿದೆ ಎಂದರು. 

ಜಿಲ್ಲಾಸ್ಪತ್ರೆ ಮಡಿಕೇರಿಯಲ್ಲಿ 10 ಹಾಸಿಗೆಯುಳ್ಳ ಎನ್.ಆರ್.ಸಿ ಯಲ್ಲಿ ದಾಖಲಾಗುವ ಮಗುವಿಗೆ ಒಂದು ದಿವಸಕ್ಕೆ ಜೌಷಧೋಪಾಯಕ್ಕೆ ರೂ.125 ಹಾಗೂ ಆಹಾರಕ್ಕೆ ರೂ.125 ಮತ್ತು ತಾಯಿಯ ಆಹಾರಕ್ಕೆ ರೂ.125 ನಿಗದಿಪಡಿಸಲಾಗಿದೆ. ಮಗುವಿನ ಜೊತೆ ಎನ್.ಆರ್.ಸಿ ಗೆ ಬರುವ ಪೋಷಕರಿಗೆ ದಿನಕ್ಕೆ ರೂ.309 ಪರಿಹಾರ ಭತ್ಯೆ ನೀಡಲಾಗುತ್ತದೆ ಎಂದು ವಿವರಿಸಿದರು. 

ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ. ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಒಟ್ಟು 160 ಆಯುಷ್ಮಾನ್ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಗರ್ಭಾವಸ್ಥೆ ಮತ್ತು ಹೆರಿಗೆಯ ಆರೈಕೆ, ನವಜಾತ ಮತ್ತು ಶಿಶುಗಳ ಆರೋಗ್ಯ, ಬಾಲ್ಯ ಮತ್ತು ಹದಿಹರೆಯದವರ ಆರೋಗ್ಯ, ಕುಟುಂಬ ಯೋಜನೆ ಮತ್ತು ಸಂತಾನೋತ್ಪತ್ತಿ ಆರೋಗ್ಯ, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ನಿರ್ವಹಣೆ, ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ, ಕಣ್ಣು, ಕಿವಿ, ಮೂಗು, ಗಂಟಲು, ದಂತ ಆರೋಗ್ಯಗಳ ತಪಾಸಣೆ, ವೃದ್ದಾಪ್ಯ ಮತ್ತು ಹಿರಿಯ ನಾಗರಿಕರ ಆರೈಕೆ ಹಾಗೂ ಮಾನಸಿಕ ಆರೋಗ್ಯ ಸೇರಿದಂತೆ 12 ಆರೋಗ್ಯ ಸೇವೆಯ ಕುರಿತು ಮಾಹಿಡಿ ನೀಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕ್ಷಯರೋಗ ನಿಮೂರ್ಲನಾ ಅಧಿಕಾರಿ ಡಾ.ಸನತ್ ಕುಮಾರ್, ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0