ಕೂಡಿಗೆಯಲ್ಲಿ ಪ್ರೌಢಶಾಲಾ ಮಕ್ಕಳಿಗೆ ತಾಲ್ಲೂಕುಮಟ್ಟದ ವಿಜ್ಞಾನ ಗೋಷ್ಠಿ, ನಾಟಕ ಸ್ಪರ್ಧೆ: ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಬಿಇಓ ಕೃಷ್ಣಪ್ಪ ಕರೆ
ಕುಶಾಲನಗರ:ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಸಂಶೋಧನಾ ಪ್ರವೃತ್ತಿ ಬೆಳೆಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಶನಿವಾರ ಕರೆ ನೀಡಿದರು. ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಕೂಡಿಗೆ ಅಂಜೆಲಾ ವಿದ್ಯಾನಿಕೇತ ಶಾಲೆಯಲ್ಲಿ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಶನಿವಾರ ( ಆ.30 ರಂದು ) ಏರ್ಪಡಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಹಾಗೂ ವಿಜ್ಞಾನ ನಾಟಕ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ವೈಜ್ಞಾನಿಕ ಅನ್ವೇಷಣೆ ಮತ್ತು ವಿಶ್ಲೇಷಣಾತ್ಮಕ ಮನೋಭಾವನೆಯನ್ನು ಹುಟ್ಟುಹಾಕಲು ವಿಜ್ಞಾನ ವಿಚಾರ ಗೋಷ್ಠಿಗಳು ಸಹಕಾರಿಯಾಗಿವೆ. ವಿಜ್ಞಾನಕ್ಕೆ ಸಂಬಂಧಿಸಿದ ಪುಸ್ತಕಗಳು ಹಾಗೂ . ಹಾಗೂ ವಿಜ್ಞಾನಿಗಳ ಜೀವನ ಚರಿತ್ರೆ, ವಿಚಾರಧಾರೆ ಮತ್ತು ಅವರ ವೈಜ್ಞಾನಿಕ ಸಾಧನೆಗಳನ್ನು ಅಧ್ಯಯನ ಮಾಡುವ ಮೂಲಕ ವಿಜ್ಞಾನದ ಹೊಸ ಹೊಸ ಆವಿಷ್ಕಾರಗಳ ಬಗ್ಗೆ ಹೆಚ್ಚಿನ ಜ್ಞಾನ ಹೊಂದಬೇಕು ಎಂದು ಬಿಇಓ ಕೃಷ್ಣಪ್ಪ ಸಲಹೆ ನೀಡಿದರು. ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯೊಂದಿಗೆ ಸಾಂಘಿಕವಾಗಿ ಪರಿಸರ ಸಂರಕ್ಷಣೆ ದೃಷ್ಟಿಯಲ್ಲಿ ತಮ್ಮ ಅಧ್ಯಯನ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಿಯಾತ್ಮಕವಾದ ಚಟುವಟಿಕೆಗಳಲ್ಲಿ ತೊಡಗಲು ಇರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ರೂಪುರೇಷೆ ಕುರಿತು ಮಾಹಿತಿ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ , ವಿದ್ಯಾರ್ಥಿಗಳು ವಿಜ್ಞಾನ ಸಮಾವೇಶದ ಮೂಲಕ ತಮ್ಮ ಸುತ್ತಲಿನ ಸಮಸ್ಯೆಗಳಿಗೆ ಸ್ವತಃ ತಾವೇ ವೈಜ್ಞಾನಿಕ ಪರಿಹಾರ ಕಂಡುಕೊಳ್ಳುವ ಮೂಲಕ ತಮ್ಮಲ್ಲಿ ಸೃಜನಶೀಲತೆ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಇಂತಹ ವಿಜ್ಞಾನ ಗೋಷ್ಠಿಗಳು ಸಹಕಾರಿಯಾಗಿವೆ ಎಂದರು.
31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿದ್ದ ಕೊಡಗು ಜಿಲ್ಲೆಯಿಂದ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದ ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ಎ.ಎಸ್.ಶ್ರೀಶಾ ಎಂಬ ವಿದ್ಯಾರ್ಥಿನಿಯು "ಕಲುಷಿತಗೊಳ್ಳುತ್ತಿರುವ ಜೀವನದಿ ಕಾವೇರಿಯನ್ನು ಸಂರಕ್ಷಿಸೋಣ" ಎಂಬ ವಿಷಯದ ಕುರಿತು ಸಮೀಕ್ಷೆ ನಡೆಸಿ ವೈಜ್ಞಾನಿಕ ಪ್ರಬಂಧವನ್ನು ಮಂಡಿಸಿದ್ದು ಜಿಲ್ಲೆಗೆ ಹೆಮ್ಮೆ ತಂದಿದೆ ಎಂದರು. ಇಂತಹ ಸ್ಪರ್ಧೆಗಳು ಮಕ್ಕಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿಯನ್ನು ಬೆಳೆಸುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಪ್ರೇಮಕುಮಾರ್ ಹೇಳಿದರು.
ಸ್ಪರ್ಧಾ ಕಾರ್ಯಕ್ರಮದ ತಾಲ್ಲೂಕು ನೋಡಲ್ ಅಧಿಕಾರಿ ಎಸ್.ಎಸ್.ಶಿವಕುಮಾರ್ , ವಿಜ್ಞಾನ ಗೋಷ್ಠಿ ಮತ್ತು ನಾಟಕ ಸ್ಪರ್ಧೆಯ ರೂಪುರೇಷೆಗಳನ್ನು ವಿವರಿಸಿದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್, ಕೂಡಿಗೆ ಡಯಟ್ ಸಂಸ್ಥೆಯ ಉಪನ್ಯಾಸಕ ವಿ.ವಿಜಯ್, ಶಾಲೆಯ ಮುಖ್ಯ ಶಿಕ್ಷಕಿ ಜೆನೆಟ್, ಸಿ ಆರ್ ಪಿ ಗಳಾದ ಕೆ.ಶಾಂತಕುಮಾರ್, ಎಚ್. ಎಸ್. ಆದರ್ಶ್, 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿದ್ದ ಕೊಡಗಿನ ಕಿರಿಯ ವಿಜ್ಞಾನಿ ಎ.ಎಸ್.ಶ್ರೀಶಾ, ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.