ಜೂನ್ 23 ರಂದು ಕೊಡಗಿನಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ
ಮಡಿಕೇರಿ: ಕೊಡಗಿನಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ನಡೆದಿದ್ದು, ಜೂ.೨೩ ರಂದು ಕುಶಾಲನಗರ ಜನಜಂಗುಳಿಗೆ ಸಾಕ್ಷಿಯಾಗಲಿದೆ ಎಂದು ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ತಿಳಿಸಿದರು.
ಬೆಳಗ್ಗೆ ೯ಕ್ಕೆ ಗಾಯತ್ರಿ ಕಲ್ಯಾಣ ಮಂಟಪದಿಂದ ಹೊರಡುವ ಭವ್ಯ ಮೆರವಣಿಗೆಯಲ್ಲಿ ಕಲಾತಂಡಗಳು, ಪೂರ್ಣಕುಂಭ ಹೊತ್ತ ಮಹಿಳೆಯರು, ಶರಣರ ವೇಷದ ವಿದ್ಯಾರ್ಥಿಗಳು, ಮಾಜಿ ಯೋಧರು ಭಾಗವಹಿಸಲಿದ್ದಾರೆ.
ಅಪರ ಜಿಲ್ಲಾಧಿಕಾರಿ ಡಾ.ಸಹನಾ ಹಾದಿಮನಿ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಚಾಲನೆ ನೀಡಲಿದ್ದಾರೆ. ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಲಿದ್ದಾರೆ. ಅರಮೇರಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮಧ್ಯಾಹ್ನ ವಿಚಾರಗೋಷ್ಠಿ, ವಚನ ಗಾಯನ, ಸಂಜೆ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಪ್ರಮುಖರಾದ ಶಾಂಬಶಿವಯ್ಯ, ಮೋಹನ್, ವಿಜಯಲಕ್ಷ್ಮಿ, ಹೆಚ್.ವಿ.ಶಿವಪ್ಪ ಇದ್ದರು.

