ಅನುದಾನಿತ ಶಾಲೆ ಹಾಗೂ ಕಾಲೇಜುಗಳ ನೌಕರರ ಸುದೀರ್ಘ ಹೋರಾಟಕ್ಕೆ ಜಯ : ಬೇಡಿಕೆಗೆ ಕರ್ನಾಟಕ ಉಚ್ಚ ನ್ಯಾಯಾಲಯ ಐತಿಹಾಸಿಕ ತೀರ್ಪು
ಕುಶಾಲನಗರ, ಜು. 26: ಅನುದಾನಿತ ಶಾಲೆ ಹಾಗೂ ಕಾಲೇಜುಗಳ ನೌಕರರ ಅನುದಾನ ರಹಿತ ಅವಧಿಯ ಸೇವೆಯನ್ನು ಪಿಂಚಣಿ ಸೇರಿದಂತೆ ರಜೆ ನಗದೀಕರಣ, ವಾರ್ಷಿಕ ವೇತನ ಬಡ್ತಿ, ಕಾಲಮಿತಿ ಬಡ್ತಿ ಹಾಗೂ ಇತರೆ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಸೇವಾವಧಿಯಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ಸುಮಾರು ಎರಡು ದಶಕಗಳಿಂದ ತಮ್ಮ ನ್ಯಾಯಸಮ್ಮತ ಹಕ್ಕುಗಳಿಗಾಗಿ ಅನುದಾನಿತ ನೌಕರರು ನ್ಯಾಯಾಲಯದ ಮೊರೆ ಹೋಗಿ ನಿರಂತರ ಹೋರಾಟ ನಡೆಸಿದ್ದು, ಅದರ ಫಲವಾಗಿ ಹೈಕೋರ್ಟ್ ನೌಕರರ ಪರವಾಗಿ ಮಹತ್ವದ ತೀರ್ಪು ನೀಡಿದೆ. ಈ ತೀರ್ಪು ರಾಜ್ಯದ ಸಾವಿರಾರು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಲ್ಲಿ ಸಂತಸ ಮೂಡಿಸಿದೆ.
ರಾಜ್ಯ ಸರ್ಕಾರವು ಹೈಕೋರ್ಟ್ ಆದೇಶವನ್ನು ಗೌರವಿಸಿ ಯಾವುದೇ ವಿಳಂಬವಿಲ್ಲದೆ ತೀರ್ಪನ್ನು ಜಾರಿಗೊಳಿಸಿ, ಅನುದಾನಿತ ನೌಕರರಿಗೆ ಪಿಂಚಣಿ ಸೇರಿದಂತೆ ಎಲ್ಲಾ ಆರ್ಥಿಕ ಹಾಗೂ ಸೇವಾ ಸೌಲಭ್ಯಗಳನ್ನು ವಿಸ್ತರಿಸಬೇಕು ಎಂದು ಕೊಡಗು ಜಿಲ್ಲಾ ಅನುದಾನಿತ ಶಾಲಾ-ಕಾಲೇಜು ನೌಕರರ ಸಂಘದ ಅಧ್ಯಕ್ಷ ಪಡಿಞರಂಡ ಪ್ರಭು ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿ ನಾಗರಾಜ್ ನಂಜರಾಯಪಟ್ಟಣ ಆಗ್ರಹಿಸಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
