ವಿರಾಜಪೇಟೆ: ಜನವರಿ 4 ರಂದು ಸರ್ಕಾರಿ ನೌಕರರ ಸಂಘದ ಮಹಾಸಭೆ
ವಿರಾಜಪೇಟೆ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರಾಜಪೇಟೆ ತಾಲೂಕು ಶಾಖೆಯ ವತಿಯಿಂದ ವಿರಾಜಪೇಟೆ ತಾಲೂಕು ಮಟ್ಟದ ಮಹಾಸಭೆಯನ್ನು ಜನವರಿ 4 ರಂದು ಅಂಬೇಡ್ಕರ್ ಭವನದಲ್ಲಿ ಪೂರ್ವಹ್ನ 10 ಗಂಟೆಗೆ ಸಂಘದ ಅಧ್ಯಕ್ಷರಾದ ಕೆ.ಎಂ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದು ಕೆ.ಎಂ. ತಿಮ್ಮಯ್ಯ ಹೇಳಿದರು.
ವಿರಾಜಪೇಟೆ ಪ್ರೆಸ್ಕ್ಲಬ್ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಮಹಾಸಭೆಯಲ್ಲಿ ನೌಕರರ ಹಿತರಕ್ಷಣೆ ಮತ್ತು ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲಾಗುವುದು. ಇದೇ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರನ್ನು ಮತ್ತು ಶಿಕ್ಷಣ ಸೇವೆ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ನೌಕರರ ಮಕ್ಕಳನ್ನು ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಹಾಗು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ತಹಸೀಲ್ದಾರ್ ಪ್ರವೀಣ್ ಕುಮಾರ್, ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಹಾಗು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತಲಿರುವರು ಎಂದು ಹೇಳಿದರು.
ಗೋಷ್ಠಿಯಲ್ಲಿ ಕಾರ್ಯದರ್ಶಿ ಬಿ.ಟಿ ದೇವರಾಜ್, ಖಜಾಂಚಿ ಎನ್.ಎಸ್ ಬಸವರಾಜ್, ರಾಜ್ಯ ಪರಿಷತ್ ಸದಸ್ಯರಾದ ಈ ಸುರೇಂದ್ರ ಉಪಸ್ಥಿತರಿದ್ದರು.