ವಿರಾಜಪೇಟೆ:ಅಸ್ಸಾಂ ಕಾರ್ಮಿಕರಿಂದ ಸ್ಥಳೀಯ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ
ವಿರಾಜಪೇಟೆ: ಸಮೀಪದ ಕದನೂರಿನಲ್ಲಿ ಸೋಮವಾರ ರಾತ್ರಿ ಅಸ್ಸಾಂ ಮೂಲದ ಕಾರ್ಮಿಕರು ಸ್ಥಳೀಯ ಆಟೋ ಚಾಲಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ವಿರಾಜಪೇಟೆ-ಮಡಿಕೇರಿ ಮುಖ್ಯ ರಸ್ತೆಯ ಕದನೂರಿನಲ್ಲಿ ಈ ಘಟನೆ ಸಂಭವಿಸಿದೆ.
ಅಚ್ಚಪಂಡ ದೀಪು ಮೊಣ್ಣಪ್ಪ (43) ಎಂಬ ಆಟೋ ಚಾಲಕನ ತಲೆಗೆ ಕಲ್ಲಿನಿಂದ ಹೊಡೆದ ಕಾರಣ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಗೊಂಡ ದೀಪು ಮೊಣ್ಣಪ್ಪ ಅವರನ್ನು ಕೂಡಲೇ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆಯನ್ನು ಖಂಡಿಸಿ ಮಂಗಳವಾರ ನೂರಾರು ಆಟೋ ಚಾಲಕರು ವಿರಾಜಪೇಟೆ ಗ್ರಾಮಾಂತರ ಠಾಣೆಗೆ ತೆರಳಿ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲೆ ಬಹುಜನ ಸಮಾಜ ಪಕ್ಷದ ಮುಖಂಡ ದಿವಿಲ್ ಕುಮಾರ್, "ಹೊರ ರಾಜ್ಯದ ಕಾರ್ಮಿಕರಿಂದ ಸ್ಥಳೀಯ ಆಟೋ ಚಾಲಕರಿಗೆ ರಕ್ಷಣೆಯೇ ಇಲ್ಲವಾಗಿದೆ. ಬಡ ಆಟೋ ಚಾಲಕರಿಗೆ ಕರುಣೆ ತೋರಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಅಧಿಕಾರಿಗಳಿಗೆ ಆಗ್ರಹಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. -
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
