ವಿಷ ಸೇವಿಸಿ ನಾಪೋಕ್ಲು ಗ್ರಾಮ ಪಂಚಾಯಿತಿ ಪೌರಕಾರ್ಮಿಕ ವಿಶ್ವನಾಥ್ ಆತ್ಮಹತ್ಯೆ

ವಿಷ ಸೇವಿಸಿ ನಾಪೋಕ್ಲು ಗ್ರಾಮ ಪಂಚಾಯಿತಿ ಪೌರಕಾರ್ಮಿಕ ವಿಶ್ವನಾಥ್ ಆತ್ಮಹತ್ಯೆ

ವರದಿ :ಝಕರಿಯ ನಾಪೋಕ್ಲು

 ನಾಪೋಕ್ಲು :ನಾಪೋಕ್ಲು ಗ್ರಾಮ ಪಂಚಾಯಿತಿಯಲ್ಲಿ ಹಲವು ವರ್ಷಗಳಿಂದ ಪೌರಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪೌರಕಾರ್ಮಿಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

 ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದ ನಿವಾಸಿ ವಿಶ್ವನಾಥ್ (33) ಆತ್ಮಹತ್ಯೆ ಮಾಡಿಕೊಂಡ ಪೌರಕಾರ್ಮಿಕ.ವಿಶ್ವನಾಥ್ ಹಲವು ವರ್ಷಗಳಿಂದ ನಾಪೋಕ್ಲು ಗ್ರಾಮ ಪಂಚಾಯಿತಿಯಲ್ಲಿ ಪೌರಕಾರ್ಮಿಕನಾಗಿ ಹಾಗೂ ಟ್ರ್ಯಾಕ್ಟರ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು.

ನಾಪೋಕ್ಲು ಮಾರುಕಟ್ಟೆ ಬಳಿಯಲ್ಲಿ ಪತ್ನಿ ಎರಡು ಮಕ್ಕಳೊಂದಿಗೆ ವಾಸವಿದ್ದ ವಿಶ್ವನಾಥ್ ಶುಕ್ರವಾರ ಮಧ್ಯರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ.ಬಳಿಕ ಇವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಭಾನುವಾರ ಮದ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ವಿಶ್ವನಾಥ್ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.