ಹೈಕಮಾಂಡ್ ಸೂಚನೆ ಪಾಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ | ಡಿಕೆಶಿ ಮನೆಯಲ್ಲಿ ಸಿಎಂ ಬ್ರೇಕ್ ಫಾಸ್ಟ್

ಹೈಕಮಾಂಡ್ ಸೂಚನೆ ಪಾಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ   | ಡಿಕೆಶಿ ಮನೆಯಲ್ಲಿ ಸಿಎಂ ಬ್ರೇಕ್ ಫಾಸ್ಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತಾಗಿ ಹರಿದಾಡುತ್ತಿದ್ದ ಊಹಾಪೋಹಗಳನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಹೈಕಮಾಂಡ್ ಏನು ಹೇಳುತ್ತದೋ ಅದನ್ನೇ ನಾವು ಅನುಸರಿಸುತ್ತೇವೆ,” ಎಂದು ಮಂಗಳವಾರ ಪುನರುಚ್ಚಾರ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಯಲ್ಲಿ ಉಪಹಾರ ಸಭೆ ಬಳಿಕ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನಾನು ಮತ್ತು ಡಿ.ಕೆ.ಶಿವಕುಮಾರ್ ಸಹೋದರರಂತೆ ಇದ್ದೇವೆ. ನಮ್ಮಿಬ್ಬರ ಸಿದ್ಧಾಂತ ಒಂದೇ ಆಗಿದೆ. 2028ರ ಚುನಾವಣೆಯಲ್ಲೂ ಒಟ್ಟಿಗೆ ಕೆಲಸ ಮಾಡಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ,” ಎಂದು ತಿಳಿಸಿದ್ದಾರೆ.

ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ಕುರಿತ ಪ್ರಶ್ನೆ ಎದುರಾದಾಗ, “ಹೈಕಮಾಂಡ್ ತೀರ್ಮಾನ ಅಂತಿಮ. ನಾವು ಪಕ್ಷದ ಮಾರ್ಗಸೂಚಿಯಂತೆ ನಡೆದುಕೊಳ್ಳುತ್ತೇವೆ,” ಎಂದು ಸಿಎಂ ಸ್ಪಷ್ಟಪಡಿಸಿದರು.

ಡಿಸೆಂಬರ್‌ 8ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಕುರಿತಂತೆ ಅವರು, “ಮೆಕ್ಕೆಜೋಳ ಸೇರಿದಂತೆ ರೈತರ ಸಮಸ್ಯೆಗಳ ಬಗ್ಗೆ ಪ್ರಾಮುಖ್ಯತೆಯಿಂದ ಚರ್ಚೆ ನಡೆಯಲಿದೆ. ಅಧಿವೇಶನದ ರಣತಂತ್ರದ ಬಗ್ಗೆ ಇಂದು ಚರ್ಚಿಸಿಕೊಳ್ಳಲಾಗಿದೆ,” ಎಂದು ಹೇಳಿದರು.

ಸಿಎಂ ಹಾಗೂ ಡಿಸಿಎಂ ನಡುವಿನ ಹೊಂದಾಣಿಕೆ ಕುರಿತು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಮಾತುಗಳಿಗೆ ಈ “ಒಗ್ಗಟ್ಟಿನ ಸಂದೇಶ” ಸ್ಪಷ್ಟ ಉತ್ತರ ನೀಡಿದೆ ಎಂದು ಪಕ್ಷದ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ.