State News

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ: ನಾಳೆಯಿಂದ ಬಿಜೆಪಿ ಪ್ರತಿಭಟನೆ

admincoorgdaily

ಯದುವೀರ್ ಒಡೆಯರ್

ಮೈಸೂರು, ಡಿ. 11: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸೂಚನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನ ನರೇಂದ್ರ ಮೋದಿ ಅವರನ್ನು ನಿಂದಿಸುವ ವೀಡಿಯೋಗಳನ್ನು ಹರಿಯಬಿಟ್ಟಿರುವ ಫಾಹಾದ್‌, ಬಾಸಿಲ್‌, ಸಮೀರ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟು ಮಾತ್ರ ಸಾಲದು ಇವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಯದುವೀರ್‌ ಆಗ್ರಹಿಸಿದರು. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಸದರು, ಇಂಥವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತಕ್ಕ ಪಾಠ ಕಲಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗ ಬಂಧಿತರಾಗಿರುವವರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಅಗತ್ಯವಿದೆ ಎಂದರು.

ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚೆ:

ಈ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಜಾರಿಯಾದರೆ ಮುಂದೆ ಇಂಥ ಅಪರಾಧ ಎಸಗಲು ಭೀತಿ ಉಂಟಾಗಬೇಕು. ಈ ಸಂಬಂಧ ಪೊಲೀಸ್‌ ಅಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿದ್ದು, ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ವಿವರಿಸಿದರು. ದೇಶದ ಪ್ರಧಾನಮಂತ್ರಿಯನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಆಗ್ರಹಿಸಿದ ನಾಳೆಯಿಂದ ಬಿಜೆಪಿ ವತಿಯಿಂದ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಸಂಸದ ಯದುವೀರ್‌ ಒಡೆಯರ್ ಮಾಹಿತಿ ನೀಡಿದರು.