ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿ ಮೈಸೂರಿನ ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಚರ್ಚಿಸಿದ ಯದುವೀರ್"
ನವದೆಹಲಿ, ಡಿ. 9: ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ 2.0 ಯೋಜನೆಯಡಿ ಮೈಸೂರಿನಲ್ಲಿ ಎರಡು ಪ್ರಮುಖ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಸಂಸದರು ಈ ಮಾಹಿತಿ ಹಂಚಿಕೊಂಡಿದ್ದಾರೆ. ಎರಡು ಯೋಜನೆಗಳಿಗೆ ಭರಪೂರ ಅನುದಾನ: ಈ ಎರಡೂ ಯೋಜನೆಗಳನ್ನು ಕರ್ನಾಟಕ ಪ್ರವಾಸೋದ್ಯಮ ಮೂಲ ಸೌಲಭ್ಯ ನಿಗಮ (KTIL) ಇದನ್ನು ಅನುಷ್ಠಾನಕ್ಕೆ ತರಲಿದೆ ಎಂದು ತಿಳಿಸಿದರು
. ಇಕಾಲಜಿಕಲ್ ಎಕ್ಸ್ಪೀರಿಯನ್ಸ್ ಝೋನ್ (EEZ): ಮೈಸೂರಿನಲ್ಲಿ ಇಕಾಲಜಿಕಲ್ ಎಕ್ಸ್ಪೀರಿಯನ್ಸ್ ಝೋನ್ ಅಭಿವೃದ್ಧಿಗೆ ₹18.47 ಕೋಟಿ ರೂ. ಅನುದಾನವನ್ನು ಹಾಗೂ ಮೈಸೂರಿನ ಟಾಂಗಾ ರೈಡ್ ಎಕ್ಸ್ಪೀರಿಯನ್ಸ್ ಝೋನ್ ಅಭಿವೃದ್ಧಿಗೆ ₹271.60 ಲಕ್ಷ ರೂಪಾಯಿ ಅನುಮೋದನೆ ನೀಡಲಾಗಿದೆ ಎಂದು ಸಂಸದರು ವಿವರಿಸಿದರು.
ಶೀಘ್ರದಲ್ಲೇ ದಿನಾಂಕ ನಿಗದಿ: ನಂತರ ಮಾತನಾಡಿದ ಯದುವೀರ್ ಒಡೆಯರ್, ಈ ಯೋಜನೆಗೆ ಅಂತಿಮ ಅನುಮೋದನೆ ದೊರಕಿರುವುದು ಸಂತಸ ಆಗಿದೆ. ಈ ಯೋಜನೆಗಳಿಂದ ಮೈಸೂರಿನಲ್ಲಿ ಪ್ರವಾಸೋದ್ಯಮ ಮತ್ತಷ್ಟು ವೃದ್ಧಿಯಾಗಲಿದೆ. ಯೋಜನೆಗಳ ಅನುಷ್ಠಾನಕ್ಕಾಗಿ ಭೂಮಿ ಪೂಜೆ ನಡೆಸಲು ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಕೇಂದ್ರ ಸಚಿವರಾದ ಗಜೆಂದ್ರ ಸಿಂಗ್ ಶೇಖಾವತ್ ಯೋಜನೆಗೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.
ಮೈಸೂರಿನ ಇನ್ನೂ ಕೆಲವು ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗುತ್ತದೆ ಎಂದು ತಿಳಿಸಿದರು.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಹಾಗೂ ಪ್ರವಾಸೋದ್ಯಮ ಕ್ಷೇತ್ರ ಉತ್ತೇಜನಕ್ಕೆ ಎಲ್ಲ ರೀತಿಯಿಂದಲೂ ನಮ್ಮ ಕೇಂದ್ರ ಬಿಜೆಪಿ ಸರ್ಕಾರ ಸಹಕಾರ ನೀಡಲಿದೆ. ಈ ಸಂಬಂಧ ನಾನು ಕೂಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಉನ್ನತಿಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದರು.
