ಕಸ್ತೂರಿ ರಂಗನ್ ವರದಿ ವಿರೋಧಿಸಿ ನಿಯೋಗ: ಮಡಿಕೇರಿಯಲ್ಲಿ ಹೋರಾಟ ಸಮಿತಿ ಸಭೆ
admincoorgdaily

ಮಡಿಕೇರಿ:"ಕಸ್ತೂರಿ ರಂಗನ್ ಹೋರಾಟ ಸಮಿತಿ - ಕೊಡಗು ಜಿಲ್ಲೆ" ವತಿಯಿಂದ ಮಡಿಕೇರಿಯಲ್ಲಿ ವಿಶೇಷ ಸಭೆ ನಡೆಯಿತು.
ಸಭೆಯಲ್ಲಿ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಮಾಜಿ ಶಾಸಕಿ ವೀಣಾ ಅಚ್ಚಯ್ಯ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣ್ಯ ಹಾಗೂ ಹೋರಾಟ ಸಮಿತಿ ಸದಸ್ಯರು, ಹೋರಾಟಗಾರರು ಉಪಸ್ಥಿತರಿದ್ದರು.
ಸಭೆಯಲ್ಲಿ ಸಾರ್ವಜನಿಕರು ತಮ್ಮ ಆತಂಕ, ಅಭಿಪ್ರಾಯ ಹಾಗೂ ಸಲಹೆಗಳನ್ನು ಮಂಡಿಸಿದರು.
ಎಲ್ಲರ ಅಭಿಪ್ರಾಯ ಆಲಿಸಿದ ಬಳಿಕ ಮಾತನಾಡಿದ ಶಾಸಕರು, ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಬೇಕೆಂಬ ಎಲ್ಲರ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತೇನೆ. ಪರಿಸರವನ್ನು ಕಾಪಾಡುವುದರೊಂದಿಗೆ ರೈತರು ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ವರದಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದರು.
ಈ ಸಂಬಂಧ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗಳ ಬಳಿ ನಿಯೋಗ ಕೊಂಡೊಯ್ಯುವ ಬಗ್ಗೆ ಚರ್ಚಿಸಲಾಯಿತು. ಜನವಸತಿ ಇರುವ ಗ್ರಾಮಗಳನ್ನು ವರದಿಯಿಂದ ಸಂಪೂರ್ಣವಾಗಿ ಕೈಬಿಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.