ಕುಡಿದ ಮತ್ತಿನಲ್ಲಿ ಡ್ರೈವಿಂಗ್; ಡಿವೈಡರ್ ಹಾರಿ ಹೋಟೆಲ್ ಗೆ ಡಿಕ್ಕಿ ಹೊಡೆದ ಕಾರು, 8 ಮಂದಿ ಕೂದಲೆಳೆಯ ಅಂತರದಲ್ಲಿ ಪಾರು
ಬೆಂಗಳೂರು, ಜ.10: ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿದ ಪರಿಣಾಮ ಇಂದಿರಾನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಎಂಟು ಮಂದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುರುವಾರ ರಾತ್ರಿ ನಡೆದ ಈ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಅತಿವೇಗದಲ್ಲಿ ಸಾಗುತ್ತಿದ್ದ ಕಾರು ಚಾಲಕ ಎಡಕ್ಕೆ ತಿರುಗಿಸದೆ ನೇರವಾಗಿ ರಸ್ತೆ ಮಧ್ಯದ ಡಿವೈಡರ್ ಅನ್ನು ಹಾರಿ ಸಮೀಪದ ಹೋಟೆಲ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಯುವಕ–ಯುವತಿಯರ ಗುಂಪು ಹಾಗೂ ಇಬ್ಬರು ದ್ವಿಚಕ್ರ ವಾಹನ ಸವಾರರು ಕ್ಷಣಮಾತ್ರದಲ್ಲಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.
ಘಟನೆ ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪಘಾತದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.