ಶ್ರೀ ಭಗವಾನ್ ವಿಶ್ವಕರ್ಮರ ಆರಾಧನೆಗೆ ಆದ್ಯತೆ ನೀಡಿ: ಎಚ್.ಬಿ.ಲಿಂಗಮೂರ್ತಿ
admincoorgdaily

ಮಡಿಕೇರಿ:-ವಿಶ್ವಕರ್ಮರು ಕೇವಲ ಒಂದು ವ್ಯಕ್ತಿಯಲ್ಲ, ಇಡೀ ಬ್ರಹ್ಮಾಂಡದ ಸೃಷ್ಟಿಗೆ ರೂಪ ನೀಡಿದ ಶಕ್ತಿ. ಆದ್ದರಿಂದ ವಿಶ್ವಕರ್ಮ ಜಯಂತಿಯನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ, ವಿಶ್ವಕರ್ಮರ ಆರಾಧನೆಯನ್ನು ಸಾರ್ವತ್ರಿಕವಾಗಿ ಪೂಜಾ ಮಹೋತ್ಸವದ ರೂಪದಲ್ಲಿ ಆಚರಿಸಬೇಕು ಎಂದು ಕುಶಾಲನಗರದ ನಿವೃತ್ತ ಪ್ರಾಂಶುಪಾಲರಾದ ಎಚ್.ಬಿ.ಲಿಂಗಮೂರ್ತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು
ವಿಶ್ವಕರ್ಮರು ಇಡೀ ಜಗತ್ತಿನ ಹಾಗೂ ಬ್ರಹ್ಮಾಂಡದ ಸೃಷ್ಟಿಕರ್ತರೆಂದು ಭಾರತೀಯ ಪರಂಪರೆಯಲ್ಲಿ ನಂಬಲಾಗಿದೆ. ಜಗತ್ತಿನಲ್ಲಿ ಏನೂ ಇಲ್ಲದ ಶೂನ್ಯ ಸ್ಥಿತಿಯಿಂದ ಸೃಷ್ಟಿ ಕಾರ್ಯವನ್ನು ಆರಂಭಿಸಿ, ರಸತತ್ವದಿಂದ ಜಲತತ್ವವನ್ನು ರೂಪಿಸಿ, ಅದನ್ನು ಪೃಥ್ವಿ ತತ್ವಕ್ಕೆ ತಂದವರು ವಿಶ್ವಕರ್ಮ ಎಂಬ ನಂಬಿಕೆಯಿದೆ ಎಂದು ಹೇಳಿದರು.
ವಿಶ್ವಕರ್ಮರು ನಿರ್ದಿಷ್ಟ ವ್ಯಕ್ತಿಗೆ ಅಥವಾ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಇಡೀ ಜಗತ್ತಿನ ಸೃಷ್ಟಿಶಕ್ತಿಯ ಪ್ರತೀಕವಾಗಿರುವುದರಿಂದ ಎಲ್ಲರೂ ಅವರನ್ನು ಗೌರವಿಸಿ ಆರಾಧಿಸಬೇಕು ಎಂದು ಅಭಿಪ್ರಾಯಪಟ್ಟರು.
ವಿಶ್ವಕರ್ಮರು ಪ್ರಳಯದ ನಂತರವೂ ಹೊಸ ಸೃಷ್ಟಿಯ ಕಾರ್ಯಕ್ಕೆ ಕಾರಣವಾಗುವ ಶಕ್ತಿಯಾಗಿದ್ದಾರೆ ಎಂಬ ಪೌರಾಣಿಕ ನಂಬಿಕೆಯಿದೆ. ಸೂರ್ಯ, ಚಂದ್ರ, ನಕ್ಷತ್ರಗಳೂ ಇಲ್ಲದ ಶೂನ್ಯ ಸ್ಥಿತಿಯಿಂದ ಹೊಸ ಜಗತ್ತಿನ ನಿರ್ಮಾಣ ಆರಂಭವಾಗುತ್ತದೆ ಎಂಬ ಕಲ್ಪನೆಯಲ್ಲಿ ವಿಶ್ವಕರ್ಮರ ಸೃಷ್ಟಿಶಕ್ತಿಯನ್ನು ಗುರುತಿಸಲಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ ವಿಶ್ವಕರ್ಮ ಜಯಂತಿಯ ಆಚರಣೆಯು ಕೇವಲ ಒಂದು ದಿನದ ಕಾರ್ಯಕ್ರಮವಾಗದೆ, ಕಾಯಕದ ಗೌರವ, ಕೌಶಲ್ಯದ ಮಹತ್ವ, ಸೃಜನಶೀಲತೆ ಹಾಗೂ ಸಮಾಜ ನಿರ್ಮಾಣದಲ್ಲಿ ವಿವಿಧ ವೃತ್ತಿಗಳ ಕೊಡುಗೆಯನ್ನು ಗೌರವಿಸುವ ಸಂದರ್ಭವಾಗಬೇಕು. ವಿಶ್ವಕರ್ಮ ತತ್ವವನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ಸಾರ್ವತ್ರಿಕ ಸೃಷ್ಟಿಶಕ್ತಿಯ ರೂಪದಲ್ಲಿ ಅರ್ಥೈಸಿಕೊಂಡು ಆರಾಧಿಸಬೇಕು ಎಂದು ಎಚ್.ಬಿ.ಲಿಂಗಮೂರ್ತಿ ಅವರು ಹೇಳಿದರು.
ವಿಶ್ವಕರ್ಮ ಸಮಾಜದ ಕೊಡಗು ಜಿಲ್ಲಾ ನಿರ್ದೇಶಕರಾದ ಕೆ.ಎಸ್.ಚಂದ್ರಶೇಖರ್ ಅವರು ಮಾತನಾಡಿ, ವಿಶ್ವಕರ್ಮ ಸಮುದಾಯವು ಉನ್ನತ ಮಟ್ಟಕ್ಕೆ ಬೆಳೆಯಬೇಕಾದರೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ರಾಜಕೀಯವಾಗಿಯೂ ಪ್ರಬಲವಾಗಬೇಕು ಎಂದು ಕರೆ ನೀಡಿದರು.
ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಪ್ರಮುಖ ಸಾಧನವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಸಮಾಜವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನ ನಡೆಯಬೇಕು ಎಂದು ಅವರು ಹೇಳಿದರು.
ವಿಶ್ವಕರ್ಮ ಸಮುದಾಯದಲ್ಲಿ ಅಪಾರ ಜ್ಞಾನ ಮತ್ತು ಪ್ರತಿಭೆ ಇದೆ. ಪ್ರಪಂಚದ ಯಾವುದೇ ಕ್ಷೇತ್ರವನ್ನು ಗಮನಿಸಿದರೂ ಸಮುದಾಯದವರ ಬುದ್ಧಿವಂತಿಕೆ ಹಾಗೂ ಕೌಶಲ್ಯವನ್ನು ಗುರುತಿಸಬಹುದು. ಆದರೆ ಈ ಜ್ಞಾನ ಮತ್ತು ಪ್ರತಿಭೆಯನ್ನು ಸಮಾಜದ ಅಭಿವೃದ್ಧಿಗೆ ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಕೆ.ಎಸ್.ಚಂದ್ರಶೇಖರ್ ಅವರು ಅಭಿಪ್ರಾಯಪಟ್ಟರು.
ಸಮುದಾಯದ ಮುಖಂಡರು ಹಾಗೂ ಸದಸ್ಯರು ಪರಸ್ಪರ ಸಹಕಾರ ಮತ್ತು ಬೆಂಬಲದೊಂದಿಗೆ ಮುನ್ನಡೆಯಬೇಕು. ಒಬ್ಬರು ಅಭಿವೃದ್ಧಿ ಸಾಧಿಸಿದಾಗ ಮತ್ತೊಬ್ಬರು ಪ್ರೋತ್ಸಾಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು. ‘ಸಮಾಜ ನನಗೇನು ಮಾಡಿದೆ?’ ಎಂಬ ಪ್ರಶ್ನೆ ಕೇಳುವುದಕ್ಕಿಂತ ‘ನಾನು ಸಮಾಜಕ್ಕೆ ಏನು ಮಾಡಿದ್ದೇನೆ’ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ತಮ್ಮಲ್ಲಿ ಕೇಳಿಕೊಳ್ಳಬೇಕು. ಸಮಾಜದಿಂದ ಏನು ಪಡೆಯಬಹುದು ಎಂಬುದಕ್ಕಿಂತ ಸಮಾಜಕ್ಕೆ ತಾವು ಏನು ಕೊಡುಗೆ ನೀಡಬಹುದು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಶಿಕ್ಷಣ, ಸಂಘಟನೆ ಹಾಗೂ ಪರಸ್ಪರ ಸಹಕಾರದ ಮೂಲಕ ವಿಶ್ವಕರ್ಮ ಸಮುದಾಯವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಅವರು ಹೇಳಿದರು.
ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಬಿ.ನಾಗರಾಜು ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ವಿಶ್ವಕರ್ಮ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಂದು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ವಿಶ್ವಕರ್ಮ ಸಮಾಜದ ಮುಖಂಡರು, ಜಿಲ್ಲೆಯಲ್ಲಿ ವಿಶ್ವಕರ್ಮ ಸಮಾಜದ ಸಂಘಟನೆ ಹಲವು ವರ್ಷಗಳಿಂದ ವಿವಿಧ ರೀತಿಯಲ್ಲಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬಂದಿದೆ. ಆದರೆ ಸಂಘಟನೆಯ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡುವ ಅಗತ್ಯವಿದೆ ಎಂದು ಹೇಳಿದರು.
ವಿರಾಜಪೇಟೆ ಹಾಗೂ ಮಡಿಕೇರಿ ತಾಲೂಕುಗಳಲ್ಲಿ ವಿಶ್ವಕರ್ಮ ಸಮಾಜದ ಸದಸ್ಯತ್ವವನ್ನು ಹೆಚ್ಚಿಸುವ ಅಗತ್ಯವಿದ್ದು, ಪ್ರತಿಯೊಂದು ತಾಲೂಕಿನಲ್ಲಿ ಕನಿಷ್ಠ 100 ಮಂದಿ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿ ಹೊಂದಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ವಿಶ್ವಕರ್ಮ ಸಮಾಜದ ಮುಖಂಡರು ಸಂಘಟನೆಗಾಗಿ ತಳಮಟ್ಟಕ್ಕೆ ಇಳಿದು ಕೆಲಸ ಮಾಡಬೇಕು. ಮುಖಂಡರು ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಮಾಜದ ಇತರರು ಸಂಘಟನೆಯೊಂದಿಗೆ ಕೈಜೋಡಿಸಲಿದ್ದಾರೆ ಎಂದು ಅವರು ಹೇಳಿದರು.
ಸಮಾಜದ ಸಂಘಟನೆ ಬಲಪಡಿಸುವುದರ ಜೊತೆಗೆ ಹಳೆಯ ಕಾಲದಿಂದಲೂ ಕರಕುಶಲ, ಕೈಗಾರಿಕೆ ಹಾಗೂ ವಿಶ್ವಕರ್ಮ ಸಮುದಾಯಕ್ಕೆ ಸಂಬಂಧಿಸಿದ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ಪುನಃಶ್ಚೇತನಗೊಳಿಸುವ ಅಗತ್ಯವಿದೆ ಎಂದು ಬಿ.ಬಿ.ನಾಗರಾಜು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಎಸ್.ಜೆ.ದೇವದಾಸ್ ಅವರು ವಿಶ್ವಕರ್ಮರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿಗಳಾಗುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರಾದ ಬಿ.ಸಿ.ಅಶೋಕ್, ಪ್ರಕಾಶ್ ಆಚಾರ್ಯ, ವಿದ್ಯಾಲತ, ದಿವಾಕರ್, ಬ್ಲಾಸಂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಇಲಾಖಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಬ್ಲಾಸಂ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ಸ್ವಾಗತಿಸಿದರು, ಸಾಹಿತಿ ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.