ಎಡಪಾಲ ಗ್ರಾಮದಲ್ಲಿ ಕಾಡಾನೆಗಳ ಹಾವಳಿ

ಎಡಪಾಲ ಗ್ರಾಮದಲ್ಲಿ ಕಾಡಾನೆಗಳ ಹಾವಳಿ

ಕಡಂಗ:ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಪಾಲ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳ ಹಿಂಡು ಗ್ರಾಮದ ಬೆಳಗಾರರ ತೋಟಗಳಿಗೆ ಲಗ್ಗೆಇಟ್ಟು ದಾಂಧಲೆ ನಡೆಸಿ ಕೃಷಿ ಗಿಡಗಳನ್ನು ನಾಶಪಡಿಸಿ ಅಪಾರ ನಷ್ಟ ಉಂಟು ಮಾಡಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.ಎಡಪಾಲ ಗ್ರಾಮದ ಕುರಿಕಡೆ ರಝಕ್ ಅವರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ತೋಟದಲ್ಲಿ ಬೆಳೆದ ಕಾಫಿ,ತೆಂಗು,ಬಾಳೆ,ಅಡಿಕೆ ಇನ್ನಿತರ ಫಸಲು ಭರಿತ ಕೃಷಿ ಗಿಡಗಳನ್ನು ತುಳಿದು ಅಪಾರ ನಷ್ಟ ಉಂಟು ಮಾಡಿದೆ. ಅದರಂತೆ ಇದೇ ಗ್ರಾಮದ ಕುರಿಕಡೆ ಕುಟುಂಬಸ್ಥರ ತೋಟಗಳಿಗೆ ಲಗ್ಗೆ ಇಟ್ಟು ದಾಂಧಲೆ ನಡೆಸಿದ್ದು ಇದರಿಂದ ತೋಟದಲ್ಲಿ ಬೆಳೆದ ಕೃಷಿ ಗಿಡಗಳನ್ನು ತುಳಿದು ನಾಶಪಡಿಸಿ ಅಪಾರ ನಷ್ಟ ಉಂಟು ಮಾಡಿದೆ. ಇದರಿಂದ ಗ್ರಾಮದ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು ಗ್ರಾಮದಲ್ಲಿ ನಡೆದಾಡಲು ಜನರು ಭಯಪಡುವ ಪರಿಸ್ಥಿತಿ ಉದ್ಭವವಾಗಿದೆ. ಕಳೆದ ಎರಡು ದಿನಗಳಿಂದ ಗ್ರಾಮದಲ್ಲಿ ಕಾಡಾನೆಗಳು ಸಂಚರಿಸುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆಗಮಿಸಿದರು.ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಅಪಾರ ಕೃಷಿ ಗಿಡಗಳು ಹಾನಿಯಾಗಿ ನಷ್ಟ ಸಂಭವಿಸಿದ್ದು ಸಂಬಂಧಪಟ್ಟ ಅರಣ್ಯ ಇಲಾಖೆ ನಷ್ಟ ಅನುಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವರದಿ:ನೌಫಲ್