ಕುಂಜಿಲಗೇರಿ:70ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಸೇರ್ಪಡೆ:

ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ಕುಂಜಿಲಗೇರಿ ಗ್ರಾಮದಲ್ಲಿ ವಲಯ ಕಾಂಗ್ರೆಸ್ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಕಾರ್ಯಕ್ರಮಕ್ಕೂ ಮೊದಲು ಸ್ಥಳೀಯ ಭಗವತಿ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸಭೆಗೆ ಆಗಮಿಸಿದರು. ಮೊದಲಿಗೆ ಸ್ಥಳೀಯ ಮುಖಂಡರು ತಮ್ಮ ಬೇಡಿಕೆಗಳ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು. ಇದರಲ್ಲಿ ಪ್ರಮುಖವಾಗಿ ನಾಲ್ಕು ರಸ್ತೆಗಳ ಉನ್ನತಿಕರಣದ ಬೇಡಿಕೆ ಇರುವುದನ್ನು ಪರಿಗಣಿಸಿದ ಶಾಸಕರು, ಎರಡು ರಸ್ತೆಗೆ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವುದಾಗಿ ಹೇಳಿ, ಉಳಿದ ರಸ್ತೆಗಳನ್ನು ಆದ್ಯತೆ ಮೇರೆಗೆ ಮಾಡಿಕೊಡುವುದಾಗಿ ತಿಳಿಸಿದರು. ಬಳಿಕ ಸಭೆಯಲ್ಲಿ ಮಾತನಾಡಿದ ಶಾಸಕರು, ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲೂ ವಿಶೇಷವಾಗಿ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನ ರಾಜ್ಯಾದ್ಯಂತ ಆಗಿದ್ದು, ಇದರ ಪ್ರಚಾರ ಮಾಡಿ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪಕ್ಷದ ಕಾರ್ಯಕರ್ತರ ಶ್ರಮ ದೊಡ್ಡದಾಗಿ ಇರಬೇಕೆಂದು ಕರೆ ನೀಡಿದರು. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದ ಕಾಂಗ್ರೆಸ್ ಸರಕಾರ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಪಕ್ಷದ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಮತ್ತಷ್ಟು ಚುರುಕಾಗಿ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು.
ಸುಮಾರು 70 ಅಧಿಕ ಜನರು ಕಾಂಗ್ರೆಸ್ ಪಕ್ಷ ಸೇರ್ಪಡೆ:
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಶಾಸಕರ ಕೆಲಸ ಕಾರ್ಯಗಳನ್ನು ಮೆಚ್ಚಿ, ಈ ಭಾಗದ ಸುಮಾರು 70 ಕ್ಕೂ ಅಧಿಕ ನಾಯಕರುಗಳು ಹಾಗೂ ಕಾರ್ಯಕರ್ತರು ಇತರ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಎಲ್ಲರನ್ನೂ ಪಕ್ಷದ ಶಲ್ಯ ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಯುವ ಕಾಂಗ್ರೆಸ್ ಕೊಡಗು ಜಿಲ್ಲಾಧ್ಯಕ್ಷರಾದ ಜಮ್ಮಡ ಸೋಮಣ್ಣ, ಯುವ ಕಾಂಗ್ರೆಸ್ ವಿರಾಜಪೇಟೆ ಕ್ಷೇತ್ರ ಅಧ್ಯಕ್ಷರಾದ ಪಟ್ಟಡ ರಕ್ಷಿತ್, ವಲಯ ಕಾಂಗ್ರೆಸ್ ಪ್ರಮುಖರಾದ ಬಟ್ಟಕಾಳಂಡ ರಾಜ ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
What's Your Reaction?






