ಪೊನ್ನಂಪೇಟೆ: ಅರಣ್ಯ ಇಲಾಖೆಯ ನೌಕರ ಮೃತ ಗೋಪಾಲ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಎ.ಎಸ್.ಪೊನ್ನಣ್ಣ: ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮದ ಭರವಸೆ

Jun 23, 2025 - 21:25
 0  78
ಪೊನ್ನಂಪೇಟೆ: ಅರಣ್ಯ ಇಲಾಖೆಯ ನೌಕರ ಮೃತ ಗೋಪಾಲ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಎ.ಎಸ್.ಪೊನ್ನಣ್ಣ:   ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮದ ಭರವಸೆ

ಪೊನ್ನಂಪೇಟೆ :-ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಲ್ಲಳ್ಳ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಇಲಾಖೆಯ ಚಾಲಕ ಜೇನು ಕುರುಬರ ಗೋಪಾಲ್ ಇತ್ತೀಚೆಗೆ ಇಲಾಖೆಯ ಜೀಪು ಕಂದಕಕ್ಕೆ ಮಗುಚಿಕೊಂಡ ಪರಿಣಾಮ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು, ಗೋಪಾಲ್ ಅವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವೈಯುಕ್ತಿಕವಾಗಿ ಆರ್ಥಿಕ ನೆರವು ನೀಡಿ, ಕುಟುಂಬಕ್ಕೆ ಧೈರ್ಯ ತುಂಬಿದರು. ಪ್ರಕರಣಕ್ಕೆ ಸಂಬಂಧಿಸಿದoತೆ ಇಲಾಖೆಯ ಕೆಲವು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯುತ್ತಿದೆ. ನ್ಯಾಯ ಸಿಗುವ ಭರವಸೆ ನೀಡಿದರಲ್ಲದೇ, ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಮೃತ ಕುಟುಂಬಸ್ಥರಿಗೆ ಸರಕಾರ ಹಾಗೂ ಅರಣ್ಯ ಇಲಾಖೆಯ ವತಿಯಿಂದ ಸೂಕ್ತ ಪರಿಹಾರ ದೊರಕಿಸುವಂತೆ ಮೃತರ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಈ ಬಗ್ಗೆ ಸರಕಾರ ಹಾಗೂ ಇಲಾಖೆಯ ವತಿಯಿಂದ ಲಭ್ಯವಾಗುವ ಪರಿಹಾರ ಕೊಡಿಸುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು.

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಅವರು ಮಾತನಾಡಿ, ಪ್ರಕರಣದ ಕುರಿತು ಶಾಸಕರ ಗಮನಕ್ಕೆ ತರಲಾಗಿದೆ. ವನ್ಯಜೀವಿ ವಲಯ ಅರಣ್ಯ ಅಧಿಕಾರಿ ಹಾಗೂ ಇತರ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲಾಗಿದ್ದು, ಸೂಕ್ತ ರೀತಿಯ ತನಿಖೆಗೆ ಆದೇಶ ನೀಡುವುದಾಗಿ ಹಾಗೂ ಗೋಪಾಲ್ ಅವರ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸಂಬoಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ. ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಸಂಘಟನೆ ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಅವರೊಂದಿಗೆ ಇರುವುದಾಗಿ ಹೇಳಿದರು.

ರಾಜ್ಯ ದಿನಗೂಲಿ ನೌಕರರ ಸಂಘದ ಗೌರವ ಅಧ್ಯಕ್ಷ ಎ.ಎಂ. ನಾಗರಾಜ್ ಅವರು ಮಾತನಾಡಿ, ಇಲಾಖೆ ಅಧಿಕಾರಿಗಳು ಇಲ್ಲಿಯವರೆಗೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಅಪಘಾತದ ಬಗ್ಗೆ ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡದೇ, ಗೌಪ್ಯವಾಗಿಡಲಾಗಿದೆ. ಅಪಘಾತವಾದ ಸಂದರ್ಭ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದರಲ್ಲದೇ, ಮೃತ ಗೋಪಾಲ್ ಅವರ ಕುಟಂಬಕ್ಕೆ 20 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಬೇಕು 10 ಲಕ್ಷ ಇಎಸ್‌ಐ ಸೌಲಭ್ಯ ನೀಡಬೇಕು. ಆರೋಪಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ರಾಜ್ಯ ದಿನಗೂಲಿ ನೌಕರರ ಸಂಘದ ಉಪಾಧ್ಯಕ್ಷ ಹರೀಶ್, ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ಜೆ.ಎನ್. ಅಪ್ಪಣ್ಣ, ಮತ್ರಂಡ ಸುಕು, ಮುನೀರ್ ಸೇರಿದಂತೆ ರಾಜ್ಯ ಮಟ್ಟದ ಪದಾಧಿಕಾರಿಗಳು ಹಾಜರಿದ್ದರು.

ವರದಿ: ಚೆಪ್ಪುಡಿರ ರೋಷನ್ ಪೊನ್ನಂಪೇಟೆ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0