ಮಕ್ಕಳಲ್ಲಿ ಅತಿಸಾರ ಭೇದಿ ತಡೆಯುವಿಕೆ ಅಭಿಯಾನ: ಆರೋಗ್ಯ ಶಿಕ್ಷಣ ಮೂಲಕ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ

ಮಡಿಕೇರಿ:-ಮಕ್ಕಳಲ್ಲಿ ಉಂಟಾಗುವ ಅತಿಸಾರ ಭೇದಿ ತಡೆಯುವಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ‘ಆರೋಗ್ಯ ಶಿಕ್ಷಣ’ ಮೂಲಕ ಜಿಲ್ಲೆಯಾದ್ಯಂತ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಅವರ ಕಚೇರಿ ಸಭಾಂಗಣದಲ್ಲಿ ಅತಿಸಾರ ಭೇದಿ ತಡೆಯುವಿಕೆ ಅಭಿಯಾನ ಕುರಿತು ಮಾಹಿತಿ ಪಡೆದು ಅವರು ಮಾತನಾಡಿದರು.
ಚಿಕ್ಕ ಮಕ್ಕಳಲ್ಲಿ ಸಾಮಾನ್ಯವಾಗಿ ಪದೇ ಪದೇ ಅತಿಸಾರ ಭೇದಿ ಉಂಟಾಗುತ್ತದೆ. ಆದ್ದರಿಂದ ಅತಿಸಾರ ಭೇದಿ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿಯೂ ಅರಿವು ಅಗತ್ಯ ಎಂದರು. ಅತಿಸಾರ ಭೇದಿಯ ನಿಯಂತ್ರಣ ಮತ್ತು ತಡೆಯುವಿಕೆ ಕುರಿತು ಸ್ವಚ್ಛತೆ, ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು. ಓಆರ್ಎಸ್ ಮತ್ತು ಜಿಂಕ್ ಲಭ್ಯತೆ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಅತಿಸಾರ ಭೇದಿ ತಡೆಗಟ್ಟುವಿಕೆ ಅಭಿಯಾನವು ಈಗಾಗಲೇ ಆರಂಭವಾಗಿದ್ದು, ಜುಲೈ, 31 ರವರೆಗೆ ಸಮುದಾಯ ಮತ್ತು ಗ್ರಾಮೀಣ ಮಟ್ಟದಲ್ಲಿ ಜರುಗಲಿದೆ ಎಂದು ತಿಳಿಸಿದರು.
ಅತಿಸಾರ ಭೇದಿ ತಡೆಯುವಿಕೆ ಅಭಿಯಾನದಡಿ ಸಮುದಾಯ ಮತ್ತು ಗ್ರಾಮ ಮಟ್ಟದಲ್ಲಿ ಓಆರ್ಎಸ್ ಹಂಚುವುದು ಮತ್ತು ಅದನ್ನು ತಯಾರಿಸುವ ವಿಧಾನ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಕೈ ತೊಳೆಯುವ ವಿಧಾನ ಕುರಿತು ಶಾಲೆಗಳಲ್ಲಿ ಪ್ರದರ್ಶಿಸಲಾಗುತ್ತದೆ. ನಗರ ಪ್ರದೇಶದಲ್ಲಿ ಸಂಚಾರಿ ಆರೋಗ್ಯ ತಂಡ ಮೂಲಕ ಜಾಗೃತಿ ಆಯೋಜಿಸಲಾಗುತ್ತದೆ ಎಂದರು.
ಆರೋಗ್ಯ ಕೇಂದ್ರ ಮಟ್ಟದಲ್ಲಿ ಓಆರ್ಎಸ್ ಮತ್ತು ಜಿಂಕ್ ಕೇಂದ್ರ ಆರಂಭ. ಅತಿಸಾರ ಭೇದಿಯ ಪ್ರಕರಣ ನಿಗಧಿತ ಮಾರ್ಗಸೂಚಿಯ ಪ್ರಕಾರ ಚಿಕಿತ್ಸೆ ನೀಡಲಾಗುತ್ತದೆ. ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ನೀರಿನ ಟ್ಯಾಂಕ್ಗಳನ್ನು ಶುಚಿಗೊಳಿಸುವುದು ಅತೀ ಮುಖ್ಯವಾಗಿದೆ ಎಂದು ಡಾ.ಸತೀಶ್ ಕುಮಾರ್ ಅವರು ವಿವರಿಸಿದರು.
ಅತಿಸಾರ ಭೇದಿ ತಡೆಗಟ್ಟುವಿಕೆ ಅಭಿಯಾನದಡಿ ಸ್ವಚ್ಛತೆ ಇಲ್ಲದ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸುವುದು, ಅಲೆಮಾರಿ ಜನರು ಹಾಗೂ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುವ ಜನರಿಗೆ ಅರಿವು ಮೂಡಿಸಲಾಗುತ್ತದೆ ಎಂದರು.
ಕೈತೊಳೆಯುವ ವೈಜ್ಞಾನಿಕ ವಿಧಾನವನ್ನು ಶಾಲಾ ಮಕ್ಕಳಿಗೆ ತಿಳಿಸುವಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುತ್ತದೆ. ಭಿತ್ತಿಪತ್ರ ಹಾಗೂ ಗೋಡೆ ಬರಹಗಳ ಮೂಲಕ ಅರಿವು ಮೂಡಿಸುವುದು, ಶಾಲೆಗಳಲ್ಲಿ ಬೆಳಗ್ಗಿನ ಪ್ರಾರ್ಥನೆಯ ನಂತರ ಕೈತೊಳೆಯುವ ಮಹತ್ವ ಮತ್ತು ಲಾಭ ಕುರಿತು ಮಾಹಿತಿ ನೀಡಲಾಗುತ್ತದೆ ಎಂದರು.
ಮಧ್ಯಾಹ್ನ ಊಟಕ್ಕಿಂತ ಮೊದಲು ಕಡ್ಡಾಯವಾಗಿ ಸಾಬೂನಿನಿಂದ ಕೈತೊಳೆದು ಊಟ ಮಾಡುವಂತೆ ಪ್ರೇರೇಪಿಸುವುದು ಈ ಜಾಗೃತಿಯನ್ನು ಅಭಿಯಾನ ಸಂದರ್ಭದಲ್ಲಿ ನಡೆಸಲಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಕುಡಿಯುವ ನೀರು ಪೂರೈಕೆ ಮತ್ತು ಒಳಚರಂಡಿ ಮಂಡಳಿ, ಕಾರ್ಮಿಕ, ವೈದ್ಯಕೀಯ ಕಾಲೇಜು ಹಾಗೂ ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಸಿರಸಗಿ ಅವರು ಮಾಹಿತಿ, ಶಿಕ್ಷಣ ಬಗ್ಗೆ ವಸ್ತು ಪ್ರದರ್ಶನ ಏರ್ಪಡಿಸುವುದು, ತಾಯಂದಿರೊಂದಿಗೆ ಸಮಾಲೋಚನೆ ಮತ್ತು ಪ್ರಾತ್ಯಕ್ಷಿಕೆ ಮಾಡುವುದು. ಓಆರ್ಎಸ್ ದ್ರಾವಣ ತಯಾರಿಕೆ ಮತ್ತು ಜಿಂಕ್ ಮಾತ್ರೆ ಬಳಕೆ, ಸ್ತನ್ಯಪಾನ ಸೇರಿದಂತೆ ಮುಂದುವರಿದ ಆಹಾರವನ್ನು ಉತ್ತೇಜಿಸುವ ಸಂಬಂಧ ಅಂಗನವಾಡಿಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ ಅವರು ಅತಿಸಾರ ಭೇದಿ ತಡೆಯುವ ಸಂಬಂಧ ಶಾಲಾ ಮಕ್ಕಳಲ್ಲಿ ಜಾಥಾ ಏರ್ಪಡಿಸಿ ಅರಿವು ಮೂಡಿಸಲಾಗುತ್ತದೆ. ಶೌಚಾಲಯಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಸಿಆರ್ಸಿ ಮತ್ತು ಬಿಆರ್ಸಿ ಮುಖಾಂತರ ಪ್ರಬಂಧ, ಚರ್ಚಾ ಸ್ಪರ್ಧೆ ಹಾಗೂ ನಾಟಕಗಳಂತಹ ಸ್ಪರ್ಧಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ರಂಗಧಾಮಪ್ಪ ಅವರು ವಿವರಿಸಿದರು.
ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಮಾಹಿತಿ ನೀಡಿ ನಗರ ಪ್ರದೇಶಗಳಲ್ಲಿ ಸುರಕ್ಷಿತ ನೀರು ಪೂರೈಕೆ ಬಗ್ಗೆ ಗಮನಹರಿಸಲಾಗಿದೆ ಎಂದರು.
ನಗರ ಪ್ರದೇಶಗಳಲ್ಲಿ ಮೊಬೈಲ್ ತಂಡಗಳ ನಿಯೋಜನೆ ಮಾಡಬೇಕಿದೆ. ಓಆರ್ಎಸ್ ಮತ್ತು ಜಿಂಕ್ ಮಾತ್ರೆ ಬಗ್ಗೆ ಕಸ ಸಂಗ್ರಹಣೆ ಮತ್ತು ವಿಲೇವಾರಿ ವಾಹನಗಳನ್ನು ಬಳಸಿಕೊಂಡು ಜಾಗೃತಿ ಮೂಡಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ ಅವರು ವೈದ್ಯಕೀಯ ಶಿಕ್ಷಣ ಇಲಾಖೆ ವತಿಯಿಂದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಪಾಲ್ಗೊಳ್ಳುವುದು. ಅತಿಸಾರ ಭೇದಿ ನಿಯಂತ್ರಣ ಅಭಿಯಾನ ಕುರಿತು ಎಲ್ಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಸೆಷನ್ ನಡೆಸುವುದು. ಗ್ರಾಮೀಣ ಆರೋಗ್ಯ ತರಬೇತಿ ಮೂಲಕ ಸಮುದಾಯ ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಸಮುದಾಯದಲ್ಲಿ ಮೇಲ್ವಿಚಾರಣೆ ಹಾಗೂ ನಿರ್ವಹಣೆ ಮಾಡುವುದು ಹೀಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಬಳಿಕ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಜನವರಿಯಿಂದ ಇಲ್ಲಿಯವರೆಗೆ 3 ಪ್ರಕರಣ ಕಂಡು ಬಂದಿದ್ದು, ಮೂವರು ಸಹ ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಡೆಂಗ್ಯೂ ನಿಯಂತ್ರಣ ಸಂಬಂಧಿಸಿದಂತೆ ಸುತ್ತಮುತ್ತಲಿನ ಪರಿಸರ ಶುಚಿತ್ವ ಅತೀ ಮುಖ್ಯವಾಗಿದೆ. ಟೈರು, ತೆಂಗಿನ ಚಿಪ್ಪು, ಡಬ್ಬಿಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪಾದನೆಯಾಗದಂತೆ ಗಮನಹರಿಸುವುದು ಅತೀ ಮುಖ್ಯವಾಗಿದೆ ಎಂದರು.
ಚರಂಡಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಹೆಚ್ಚು ದಟ್ಟಣೆ ಪ್ರದೇಶಗಳಲ್ಲಿ ಸ್ವಚ್ಛತೆ ಜೊತೆಗೆ ಆರೋಗ್ಯ ಶಿಕ್ಷಣ ಮೂಲಕ ಅರಿವು ಮೂಡಿಸಲಾಗುತ್ತದೆ. ಕೈಗಾರಿಕಾ ಪ್ರದೇಶಗಳು ಸೇರಿದಂತೆ ಹಲವು ಕಡೆಗಳಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಶಾಲಾ ಶಿಕ್ಷಣ ಇಲಾಖೆ ವ್ಯಾಪ್ತಿಯ ಸಿಆರ್ಪಿ ಮತ್ತು ಬಿಆರ್ಸಿಗಳಿಗೆ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಎಂಬ ತಂತ್ರಾಂಶದ ಕುರಿತು ವಿಡಿಯೋ ಸಂವಾದ ಮೂಲಕ ತರಬೇತಿ ನೀಡಲು ಇದೇ ಸಂದರ್ಭದಲ್ಲಿ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ನಗರ ತಂಬಾಕು ನಿಯಂತ್ರಣ ಕೋಶ ರಚಿಸಿ ತಂಬಾಕು ವ್ಯಾಪಾರಿಗಳಿಗೆ ಪ್ರತ್ಯೇಕ ಪರವಾನಿಗೆ ನೀಡುವುದು ಹಾಗೂ ತಂಬಾಕು ಪರವಾನಿಗೆಯ ಮಾಹಿತಿ ನೀಡುವುದು, ಜಿಲ್ಲಾ ಆಸ್ಪತ್ರೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರಕ್ಕೆ ಕೊಠಡಿ ವ್ಯವಸ್ಥೆ ಕಲ್ಪಿಸುವುದು, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಧೂಮಪಾನ ನಿಷೇಧಿತ ಪ್ರದೇಶ ಎಂಬ ನಾಮಫಲಕ ಅಳವಡಿಸುವುದು. ಶಾಲೆ ಮತ್ತು ಕಾಲೇಜುಗಳಲ್ಲಿ ಒಬ್ಬ ಶಿಕ್ಷಕರು, ಉಪನ್ಯಾಸಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಟಿಒಎಫ್ಇಐ(ಟೊಬೆಕೋ ಫ್ರೀ ಎಜುಕೇಷನ್ ಶಿಕ್ಷಣ ಸಂಸ್ಥೆ)ಯ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮತ್ತಿತರ ಬಗ್ಗೆ ಸುಧೀರ್ಘ ಚರ್ಚೆ ನಡೆಯಿತು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಆರ್ಸಿಎಚ್ ಅಧಿಕಾರಿ ಡಾ.ಮಧುಸೂದನ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಶರತ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ.ಚೇತನ್(ಮಡಿಕೇರಿ), ಡಾ.ಯತಿರಾಜು (ವಿರಾಜಪೇಟೆ), ಡಾ.ಇಂದೂಧರ(ಸೋಮವಾರಪೇಟೆ), ಇಂಡಿಯನ್ ಮೆಡಿಕಲ್ ಅಸೋಷಿಯೇಷನ್ನ ಪ್ರತಿನಿಧಿ ಡಾ.ಶ್ಯಾಮ್ ಅಪ್ಪಣ್ಣ, ಪರಿಸರ ಅಧಿಕಾರಿ ರಘುರಾಮ್, ಮಕ್ಕಳ ತಜ್ಞರಾದ ಕುಶ್ವಂತ್ ಕೋಳಿಬೈಲು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
What's Your Reaction?






