ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಎ.ಎಸ್ ಪೊನ್ನಣ್ಣ
ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ತಮ್ಮ ವಿರಾಜಪೇಟೆಯ ಗೃಹ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ ನಡೆಸಿದರು. ಲೋಕೋಪಯೋಗಿ ಇಲಾಖೆ, ಐಟಿಡಿಪಿ, ಕಂದಾಯ ಮೊದಲಾದ ಇಲಾಖೆ ಅಧಿಕಾರಿಗಳು ತಮ್ಮ ಕಡತಗಳೊಂದಿಗೆ ಇಂದು ಸಭೆಯಲ್ಲಿ ಭಾಗವಹಿಸಿದರು.
ಶಾಸಕರು ಪ್ರತಿಯೊಂದು ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಅವರವರ ಇಲಾಖೆಯಲ್ಲಿ ಈಗಾಗಲೇ ಪೂರ್ಣಗೊಂಡಿರುವ, ಪ್ರಗತಿಯಲ್ಲಿರುವ ಹಾಗೂ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ವಿವಿಧ ಕೆಲಸಗಳ ಬಗ್ಗೆ ವಿಸ್ತೃತ ವರದಿಯನ್ನು ಕೇಳಿದರು.
ಮೊದಲಿಗೆ ಡೆಲ್ಟ್ ವಿಭಾಗದ ಅಧಿಕಾರಿಗಳೊಂದಿಗೆ ಸಂಪೂರ್ಣ ಮಾಹಿತಿ ಪಡೆದ ಶಾಸಕರು, ಬಳಿಕ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಬಂದಿರುವ ಅನುದಾನಗಳ ಬಳಕೆ ಬಗ್ಗೆ ಮಾಹಿತಿ ಪಡೆದರು. ಪ್ರಮುಖವಾಗಿ ಲೋಕೋಪಯೋಗಿ ಇಲಾಖೆ ಮತ್ತು ಐಟಿಡಿಪಿ ವತಿಯಿಂದ ಈ ಬಾರಿ ಹೆಚ್ಚಿನ ಅನುದಾನ ಕ್ಷೇತ್ರಕ್ಕೆ ಬಂದಿದ್ದು ಈ ಕಾಮಗಾರಿಗಳ ಪ್ರಗತಿ ಬಗ್ಗೆ ಸವಿವರವಾದ ವರದಿಯನ್ನು ಪಡೆದರು. ಕೆಲವು ಭಾಗಗಳಲ್ಲಿ ಕುಂಠಿತವಾಗಿ ಸಾಗುತ್ತಿರುವ ಕೆಲಸದ ಬಗ್ಗೆ ಅಧಿಕಾರಿಗಳ ಗಮನ ಸೆಳೆದ ಶಾಸಕರು, ಕೂಡಲೇ ಅಗತ್ಯ ಕ್ರಮ ಕೈಗೊಂಡು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟ ಕಾಯ್ದುಕೊಂಡು ಮುಗಿಸಿ ಕೊಡಬೇಕೆಂದು ಖಡಕ್ ಆದೇಶ ನೀಡಿದರು.